ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ವಿವಿಧ ಇಲಾಖೆಗಳ ಸಹಯೋಗದಲ್ಲಿ ಕೊಪ್ಪಳದ ಹಳೆ ಜಿಲ್ಲಾಸ್ಪತ್ರೆ ಆವರಣದಲ್ಲಿ ಏರ್ಪಡಿಸಲಾದ ಜಾಗೃತಿ ಜಾಥಾಕ್ಕೆ ಜಿಲ್ಲಾ ಪಂಚಾಯತಿ ಹಂಗಾಮಿ ಅಧ್ಯಕ್ಷೆ ಲಕ್ಷ್ಮಮ್ಮ ನೀರಲೂಟಿ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ವಿಶ್ವ ಜನಸಂಖ್ಯೆ ಸ್ಥಿರೀಕರಣ ಪಾಕ್ಷಿಕ ಕಾರ್ಯಕ್ರಮದಡಿ ಹೊಸ ಅಲೆ ಹೊಸ ವಿಶ್ವಾಸ ಸಂಪೂರ್ಣ ಜವಾಬ್ದಾರಿಯೊಂದಿಗೆ ಪರಿಹಾರ ವಿಕಾಸ ಎಂಬ ಘೋಷ ವಾಕ್ಯದೊಂದಿಗೆ, ಜಾಗೃತಿ ಜಾಥಾ ಆಯೋಜಿಸಲಾಯಿತು. ಜಿಲ್ಲಾಧಿಕಾರಿ ಎಂ. ಕನಗವಲ್ಲಿ, ಪ್ರಭಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಕೆ. ದೇಸಾಯಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಜಂಬಯ್ಯ, ಜಿಲ್ಲಾ ಸರ್ವೇಕ್ಷಣಾಧಿಕಾಋಇ ಎಂ.ಎಂ. ಕಟ್ಟಿಮನಿ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ವಿರುಪಾಕ್ಷರೆಡ್ಡಿ ಮಾದಿನೂರ ಸೇರಿದಂತೆ ಡಾ. ರಮೇಶ್ ಮೂಲಿಮನಿ, ಡಾ. ರಾಮಾಂಜನೇಯ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಹಳೆ ಜಿಲ್ಲಾಸ್ಪತ್ರೆ ಆವರಣದಿಂದ ಪ್ರಾರಂಭಗೊಂಡ ಜಾಗೃತಿ ಜಾಥಾ ನಗರದ ಪ್ರಮುಖ ರಸ್ತೆ, ಅಶೋಕ ಸರ್ಕಲ್, ಜವಾಹರರಸ್ತೆ ಮೂಲಕ ದಿವಟರ್ ಸರ್ಕಲ್ನಿಂದ ಪುನಃ ಹಳೆ ಜಿಲ್ಲಾಸ್ಪತ್ರೆ ಆವರಣದವರೆಗೆ ಸಾಗಿ ಬಂದಿತು. ಜಾಥಾದಲ್ಲಿ ಎಲ್ಲ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು, ಮೇಲ್ವಿಚಾರಕರು, ಬಿಎಚ್ಇಒ, ಆರೋಗ್ಯ ಸಹಾಯಕರು, ಎಎನ್ಎಂ ತರಬೇತಿ ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು. ಜನಸಂಖ್ಯಾ ಸ್ಥಿರೀಕರಣ ಪಾಕ್ಷಿಕ ಅಂಗವಾಗಿ ಜು. ೧೧ ರಿಂದ ೨೪ ರವರೆಗೆ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆಗಳು ಅಲ್ಲದೆ ಜಿಲ್ಲೆಯ ಆಯ್ದ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಸಂತಗಾನ ಹರಣ ಶಸ್ತ್ರಚಿಕಿತ್ಸೆಗಳನ್ನು ಏರ್ಪಡಿಸಲಾಗುವುದು. ಮಕ್ಕಳ ಜನನದಲ್ಲಿ ಅಂತರ ಕಾಪಾಡಿಕೊಳ್ಳಲು ಕುಟುಂಬ ನಿಯಂತ್ರಣ ವಿಧಾನದ ಎಲ್ಲ ಸೌಲಭ್ಯಗಳನ್ನು ಆರೋಗ್ಯ ಸಂಸ್ಥೆಗಳಲ್ಲಿ ಒದಗಿಸಲಾಗುವುದು ಎಂದು ಡಾ. ಎಸ್.ಕೆ. ದೇಸಾಯಿ ಈ ಸಂದರ್ಭದಲ್ಲಿ ಹೇಳಿದರು.
ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಕೊಪ್ಪಳದಲ್ಲಿ ಜಾಗೃತಿ ಜಾಥಾಕ್ಕೆ ಚಾಲನೆ
Please follow and like us: