ಕೊಪ್ಪಳ ಜ.೧೫ ಕನಕಗಿರಿ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲಿರುವ ಹಿನ್ನೆಲೆಯಲ್ಲಿ ಇದಕ್ಕೆ ಪೂರಕವಾಗಿ ಕನಕಗಿರಿ ಗ್ರಾಮವನ್ನು ೦೧ ಕೋಟಿ ರೂ. ವೆಚ್ಚದಲ್ಲಿ ರಸ್ತೆ, ಕುಡಿಯುವ ನೀರು ಸೇರಿದಂತೆ ಇತರೆ ಕಾಮಗಾರಿಗಳನ್ನು ಕೂಡಲೆ ಕೈಗೆತ್ತಿಕೊಳ್ಳಲಾಗುವುದು ಎಂದು ಕನಕಗಿರಿ ಶಾಸಕ ಶಿವರಾಜ್ ತಂಗಡಗಿ ಅವರು ಹೇಳಿದರು.
ಕನಕಗಿರಿ ಉತ್ಸವ ಆಚರಣೆ ಸಂಬಂಧ ಗಂಗಾವತಿ ತಾಲೂಕು ಕನಕಗಿರಿಯ ಶ್ರೀ ಕನಕಾಚಲಪತಿ ದೇವಸ್ಥಾನದ ಆವರಣದಲ್ಲಿ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಸಭೆಯಲ್ಲಿ ಭಾಗವಹಿಸಿದ್ದ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಮಾತನಾಡಿ, ಐತಿಹಾಸಿಕ ಕ್ಷೇತ್ರವಾಗಿರುವ ಕನಕಗಿರಿಯ ಸಮಗ್ರ ಅಭಿವೃದ್ಧಿಗಾಗಿ ಈಗಾಗಲೆ ಮಾಸ್ಟರ್ ಪ್ಲಾನ್ ಅನ್ನು ತಯಾರಿಸಿ, ಮುಜರಾಯಿ ಇಲಾಖೆಗೆ ಕಳುಹಿಸಿಕೊಡಲಾಗಿದೆ. ಮುಜರಾಯಿ ಇಲಾಖೆಯಿಂದ ಈಗಾಗಲೆ ಸಮೀಕ್ಷಾ ಕಾರ್ಯ ನಡೆದಿದ್ದು, ಇಲಾಖೆಯ ಒಪ್ಪಿಗೆ ಸಧ್ಯದಲ್ಲೇ ದೊರೆಯುವ ನಿರೀಕ್ಷೆ ಇದೆ. ಕನಕಗಿರಿಯ ಮಹತ್ವಪೂರ್ಣ ವಾಸ್ತುಶಿಲ್ಪಗಳನ್ನು ಗುರುತಿಸಿ ಅವುಗಳಿಗೆ ಸೂಕ್ತ ರಕ್ಷಣೆ ಹಾಗೂ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಉತ್ಸವ ಪ್ರಾರಂಭದೊಳಗಾಗಿ ಕನಕಗಿರಿಯ ಎಲ್ಲಾ ವಾರ್ಡುಗಳಿಗೂ ಸಮರ್ಪಕ ಕುಡಿಯುವ ನೀರು ಒದಗಿಸಬೇಕು ಎಂದು ಪಂ.ರಾ.ಇಂ. ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರಿಗೆ ಸೂಚನೆ ನೀಡಲಾಗಿದೆ. ಉತ್ಸವದ ನೆಪದಲ್ಲಿಯಾದರೂ, ಕನಕಗಿರಿ ಗ್ರಾಮವನ್ನು ಸ್ವಚ್ಛವಾಗಿಸಲು, ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಸಹಕರಿಸಬೇಕು ಎಂದು ಮನವಿ ಮಾಡಿಕೊಂಡರು.
ಸಭೆಯಲ್ಲಿ ಅಭಿವೃದ್ಧಿ ಕಾರ್ಯಗಳ ಕುರಿತಂತೆ ಚರ್ಚಿಸುವ ಸಂದರ್ಭ ಗದ್ದಲ ಉಂಟಾಗಿ, ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾದರೂ, ಜಿಲ್ಲಾಧಿಕಾರಿಗಳ ಮದ್ಯ ಪ್ರವೇಶದಿಂದಾಗಿ ಪರಿಸ್ಥಿತಿ ತಿಳಿಗೊಂಡು, ಉತ್ಸವ ಕುರಿತಂತೆ ಚರ್ಚೆ ಸಾಗಿತು.
ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್. ರಾಜಾರಾಂ, ಜಿ.ಪಂ. ಸದಸ್ಯ ಗಂಗಣ್ಣ ಸಮಗಂಡಿ, ತಾ.ಪಂ. ಅಧ್ಯಕ್ಷ ಬಸವರಾಜ್, ತಾ.ಪಂ. ಸದಸ್ಯೆ ಸರ್ವಮಂಗಳ, ಹೊನ್ನೂರಸಾಬ್, ಗ್ರಾ.ಪಂ. ಅಧ್ಯಕ್ಷೆ ರಂಗಮ್ಮ ನಾಯಕ್, ಉಪಾಧ್ಯಕ್ಷ ಪ್ರಕಾಶ್ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.
Please follow and like us: