ಕೊಪ್ಪಳ ಜನತೆಯ ಬೇಡಿಕೆಗೆ ಸ್ಪಂದನೆ: ಕುಮಾರಸ್ವಾಮಿ ಭರವಸೆ

Get real time updates directly on you device, subscribe now.

 

ಕೊಪ್ಪಳ: ಬಲ್ದೋಟ ಸಮೂಹದ ಉದ್ದೇಶಿತ 54,000 ಕೋಟಿ ರೂಪಾಯಿ ವೆಚ್ಚದ ಉಕ್ಕು ಕೈಗಾರಿಕಾ ಘಟಕದ ಸ್ಥಾಪನೆಯ ವಿರುದ್ಧ ವ್ಯಕ್ತವಾಗುತ್ತಿರುವ ವಿರೋಧವನ್ನು ಗಮನದಲ್ಲಿಟ್ಟುಕೊಂಡು ಕೊಪ್ಪಳ ಜನತೆಯ ಬೇಡಿಕೆಗೆ ಸ್ಪಂದಿಸಲು ಸೂಕ್ತ ಕ್ರಮ‌ ಕೈಗೊಳ್ಳುವುದಾಗಿ ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಹೆಚ್ ಡಿ ಕುಮಾರಸ್ವಾಮಿ ಅವರು ಭರವಸೆ ನೀಡಿದ್ದಾರೆ‌ ಎಂದು ಜೆ ಡಿ (ಎಸ್) ಪಕ್ಷದ ಜಿಲ್ಲಾ ಘಟಕದ ಪತ್ರಿಕಾ ಪ್ರಕಟಣೆ ತಿಳಿಸಿದೆ.
ಬಲ್ದೋಟ ಸಮೂಹ ಹಾಗೂ ರಾಜ್ಯ ಸರಕಾರ ಉಕ್ಕು ಘಟಕದ ಸ್ಥಾಪನೆಗೆ ಒಪ್ಪಂದ ಮಾಡಿಕೊಂಡ ನಂತರ ಕೊಪ್ಪಳದಲ್ಲಿ ವ್ಯಕ್ತವಾದ ವಿರೋಧವನ್ನು ಗಮನದಲ್ಲಿಟ್ಟುಕೊಂಡು ಶುಕ್ರವಾರ ಬೆಳಿಗ್ಗೆ ಜೆ ಡಿ (ಎಸ್) ರಾಜ್ಯ ಕೋರ್ ಕಮಿಟಿ ಸದಸ್ಯರಾದ ಸಿ ವಿ ಚಂದ್ರಶೇಖರ್ ಹಾಗೂ ಜಿಲ್ಲಾ ಘಟಕದ ಅಧ್ಯಕ್ಷರಾದ ಸುರೇಶ್ ಭೂಮರೆಡ್ಡಿ ಅವರು ಕೇಂದ್ರ ಸಚಿವರನ್ನು ಬೆಂಗಳೂರಿನ ಜೆ ಪಿ ನಗರದ ಅವರ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಘಟಕದ ಸ್ಥಾಪನೆಯಿಂದ ಉಂಟಾಗಬಹುದಾದ ಪರಿಣಾಮಗಳ ಕುರಿತು ಮಾಹಿತಿ ನೀಡಿ ಮಧ್ಯಪ್ರವೇಶಿಸುವಂತೆ ಮನವಿ ಪತ್ರವನ್ನು ಸಲ್ಲಿಸಿದರು. ಕೈಗಾರಿಕಾ ಘಟಕಗಳ ಮಾಲಿನ್ಯದಿಂದ ಈಗಾಗಲೇ ನಲುಗಿ ಹೋಗಿರುವ ಕೊಪ್ಪಳದ ಜನತೆಯನ್ನು ರಾಜ್ಯ ಸರಕಾರ ಬೆಂಕಿಯಿಂದ ಬಾಣಲೆಗೆ ನೂಕಿದೆ. ಸಮುದಾಯದ ಆರೋಗ್ಯ ಹಾಗೂ ಕೃಷಿ ಕ್ಷೇತ್ರಗಳ ಮೇಲೆ ಮಾರಕ ಪೆಟ್ಟು ನೀಡುವ ಈ ಯೋಜನೆ ಯಾವುದೇ ಕಾರಣಕ್ಕೂ ಅನುಷ್ಠಾನವಾಗಬಾರದೆಂದು ಒತ್ತಿ ಹೇಳಿದರು.
ಕ್ರಿಯಾಶೀಲವಾಗಿರುವ ಕೈಗಾರಿಕಾ ಘಟಕಗಳು ನಿಯಮಗಳನ್ನು ಉಲ್ಲಂಘಿಸಿ ಕೊಪ್ಪಳವನ್ನು ನರಕ ಸದೃಶವನ್ನಾಗಿಸಿವೆ. ಅವುಗಳ ವಿರುದ್ಧ ಕೇಂದ್ರ ಸರಕಾರದ ನಿಯಮಾವಳಿಗಳ ಅಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು.
ಮನವಿ ಸ್ವೀಕರಿಸಿ ಮಾತನಾಡಿದ ಕೇಂದ್ರ ಸಚಿವರು ತಮಗೆ ಕೊಪ್ಪಳದಲ್ಲಿ ನಡೆದಿರುವ ಬೆಳವಣಿಗೆಗಳ ಬಗ್ಗೆ ಮಾಹಿತಿ ಇದೆ. ಅಭಿವೃದ್ಧಿಗೆ ಕೈಗಾರಿಕಾ ಘಟಕಗಳ ಸ್ಥಾಪನೆ ಅಗತ್ಯ. ಆದರೆ ಸಮುದಾಯದ ಆರೋಗ್ಯ, ಪರಿಸರ ಹಾಗೂ ಕೃಷಿ ಕ್ಷೇತ್ರಗಳಿಗೆ ಮಾರಕವಾಗುವ ಯಾವುದೇ ಯೋಜನೆಗಳನ್ನು ಒಪ್ಪಲಾಗದು. ಕೊಪ್ಪಳ ಜನತೆಯ ಬೇಡಿಕೆಗೆ ಸೂಕ್ತವಾಗಿ ಸ್ಪಂದಿಸಲಾಗುವುದು ಎಂದು ಭರವಸೆ ನೀಡಿದರು ಎಂದು ಪತ್ರಿಕಾ ಪ್ರಕಟಣೆ ವಿವರಿಸಿದೆ.

: ಜೆ ಡಿ (ಎಸ್) ರಾಜ್ಯ ಕೋರ್ ಕಮಿಟಿ ಸದಸ್ಯರಾದ ಸಿ ವಿ ಚಂದ್ರಶೇಖರ್ ಹಾಗೂ ಕೊಪ್ಪಳ ಜಿಲ್ಲಾ ಘಟಕದ ಅಧ್ಯಕ್ಷರಾದ ಸುರೇಶ್ ಭೂಮರೆಡ್ಡಿ ಅವರು ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಶ್ರೀ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಶುಕ್ರವಾರ ಬೆಳಗ್ಗೆ ಭೇಟಿಯಾಗಿ ಕೊಪ್ಪಳದಲ್ಲಿ ರಾಜ್ಯ ಸರ್ಕಾರದೊಂದಿಗೆ ಕೈಗಾರಿಕಾ ಘಟಕ ಸ್ಥಾಪಿಸಲು ಬಲ್ದೋಟ ಸಮೂಹ ಕಂಪನಿ ಮಾಡಿಕೊಂಡ ಒಪ್ಪಂದವನ್ನು ವಿರೋಧಿಸಿ ಮಧ್ಯ ಪ್ರವೇಶಿಸುವಂತೆ ಕೋರಿ ಮನವಿ ಪತ್ರ ಸಲ್ಲಿಸಿದರು.

Get real time updates directly on you device, subscribe now.

Comments are closed.

error: Content is protected !!