ಮುಂದಿನ ಸಚಿವ ಸಂಪುಟದಲ್ಲಿ ಪುನಃ ಕಾಂತರಾಜು ವರದಿ ಬಗ್ಗೆ ಚರ್ಚೆ: ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು, ಏ.17
ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ವರದಿ ಬಗ್ಗೆ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಯಾವುದೇ ಸಚಿವರು ಅಸಮಾಧಾನ ವ್ಯಕ್ತಪಡಿಸಿಲ್ಲ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಅವರು ಹೇಳಿದ್ದಾರೆ.
ಸಚಿವ ಸಂಪುಟ ಸಭೆ ಬಳಿಕ ಗುರುವಾರ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ದತ್ತಾಂಶಗಳ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಸುದೀರ್ಘವಾದ ಚರ್ಚೆ ಮಾಡಿದ್ದೇವೆ. ಇನ್ನು ತಾಂತ್ರಿಕ ಅಂಶಗಳು ಅವಶ್ಯ ಎಂದು ಭಾವಿಸಿ, ಹಿರಿಯ ಅಧಿಕಾರಿಗಳಿಗೆ ತಾಂತ್ರಿಕ ದತ್ತಾಂಶ ಒದಗಿಸುವಂತೆ ಸೂಚಿಸಿದ್ದೇವೆ ಎಂದರು.
ಚರ್ಚೆ ಅಪೂರ್ಣವಾಗಿದ್ದು, ಕೆಲವು ಸಚಿವರು ತಾಂತ್ರಿಕ ಮಾಹಿತಿಯನ್ನು ಕೇಳಿದ್ದಾರೆ. ಆ ಮಾಹಿತಿಯನ್ನು ಒದಗಿಸಲಾಗುವುದು. ಇಲಾಖೆ ಮಂತ್ರಿಯಾಗಿರುವ ಕಾರಣ ಆ ಮಾಹಿತಿಯನ್ನು ಒದಗಿಸುತ್ತೇನೆ. ಮುಂದಿನ ಮೇ 2 ರಂದು ನಡೆಯುವ ಸಚಿವ ಸಂಪುಟ ಸಭೆಗೆ ವರದಿಯ ವಿಷಯ ಚರ್ಚೆಗೆ ಬರಲಿದ್ದು, ವಿಸ್ತೃತವಾದ ಚರ್ಚೆ ನಡೆಯಲಿದೆ. ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ. ಯಾರು ಕೂಡ ಏರು ಧ್ವನಿಯಲ್ಲಿ ಮಾತನಾಡಿಲ್ಲ, ಅದೆಲ್ಲವೂ ಕೇವಲ ಊಹಾಪೋಹಗಳು ಎಂದು ಪ್ರಶ್ನೆಯೊಂದಕ್ಕೆ ಸಚಿವ ಶಿವರಾಜ್ ತಂಗಡಗಿ ಉತ್ತರಿಸಿದರು.
Comments are closed.