ಹಿಂದೂ ಧರ್ಮ ಪುನರುಜ್ಜೀವನಗೊಳಿಸುವಲ್ಲಿ ಶಂಕರಾಚಾರ್ಯರ ಪಾತ್ರ ನಿರ್ಣಾಯಕ: ಸಚಿವ ಶಿವರಾಜ್ ತಂಗಡಗಿ ಅಭಿಮತ

Get real time updates directly on you device, subscribe now.

ಬೆಂಗಳೂರು: ಮೇ 2

ಆದಿ ಶಂಕರಾಚಾರ್ಯರು ಅದ್ವೈತ ವೇದಾಂತದ ಅಡಿಪಾಯವನ್ನು ಹಾಕುವ ಮೂಲಕ ಸಾಂಸ್ಕೃತಿಕ ಮತ್ತು ಧಾರ್ಮಿಕ ಅವನತಿಯ ಸಮಯದಲ್ಲಿ ಹಿಂದೂ ಧರ್ಮವನ್ನು ಪುನರುಜ್ಜೀವನಗೊಳಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಅವರು ಅಭಿಪ್ರಾಯಪಟ್ಟರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಶುಕ್ರವಾರ ಆಯೋಜಿಸಿದ್ದ ಶ್ರೀ ಆದಿ ಶಂಕರಾಚಾರ್ಯರ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಆಧ್ಯಾತ್ಮಿಕ ಕ್ರಾಂತಿಕ ಹರಿಕಾರರಾಗಿದ್ದ ಶಂಕರಾಚಾರ್ಯರು ಭಾರತೀಯ ತತ್ವಶಾಸ್ತ್ರದ ಶ್ರೇಷ್ಠ ವ್ಯಕ್ತಿಯಲ್ಲಿ ಒಬ್ಬರಾಗಿದ್ದರು.‌ 8ನೇ ವಯಸ್ಸಿನಲ್ಲೇ ಮಹನೀಯರು ಅಪಾರ ಜ್ಞಾನ ಹೊಂದಿದ್ದರು. ತಮ್ಮ 32 ವಯಸ್ಸಿನಲ್ಲೇ ಅಪಾರ ಮೈಲಿಗಲ್ಲು ಸ್ಥಾಪಿಸಿದ್ದರು ಎಂದು ಶ್ಲಾಘಿಸಿದರು.

ಧರ್ಮದ‌ ಹೆಸರಲ್ಲಿ ದಾರಿ‌ ತಪ್ಪಿಸುವ ಕೆಲಸ:
ಧರ್ಮದ ಹೆಸರಿನಲ್ಲಿ ಹರಡುತ್ತಿರುವ ವಿವಿಧ ರೀತಿಯ ತಪ್ಪು ಕಲ್ಪನೆಗಳನ್ನು ಹೋಗಲಾಡಿಸವ ಕೆಲವನ್ನು ಶಂಕರಾಚಾರ್ಯರು ಮಾಡಿದ್ದರು. ಆದರೆ ಇವತ್ತು ಧರ್ಮದ ಹೆಸರಿನಲ್ಲಿ ಕೆಲವರು ಯುವ ಸಮುದಾಯವನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಈ ವಿಚಾರವಾಗಿ ಜನ ಜಾಗೃತರಾಗಬೇಕು ಎಂದು ಸಚಿವರು ಕಿವಿಮಾತು ಹೇಳಿದರು.

ಶಂಕರಾಚಾರ್ಯರು, ಬಸವಣ್ಣ, ಕನಕದಾಸರು ಸೇರಿದಂತೆ ಹಲವು ಮಹನೀಯರು ಯಾವುದೇ ಒಂದು ಧರ್ಮ ಮತ್ತು ಜಾತಿಗೆ ಸಿಮೀತವಾದವರಲ್ಲ. ಈ ಮೇಲಿನ‌ ಮಹನೀಯರೆಲ್ಲರೂ ಚಿಕ್ಕ ವಯಸ್ಸಿನಲ್ಲೇ ಅಪಾರ ಸಾಧನೆ ಮಾಡಿದವರು. ಅವರೆಲ್ಲರ ಆಚಾರ,‌ ವಿಚಾರ ಮತ್ತು ಚಿಂತನೆಗಳು ಎಂದೆಂದಿಗೂ ಪ್ರಸ್ತುತ ಎಂದರು.

ಶಂಕರಾಚಾರ್ಯರರ ಹೆಸರಲ್ಲಿ ಮುಂದಿನ ವರ್ಷದಿಂದ ಪ್ರಶಸ್ತಿ: ಶಂಕರಾಚಾರ್ಯರ ಹೆಸರಿನಲ್ಲಿ ಮುಂದಿನ ವರ್ಷದಿಂದ ಪ್ರಶಸ್ತಿ ನೀಡಲಾಗುವುದು ಎಂದು ಸಚಿವರು ಇದೇ ವೇಳೆ ಘೋಷಿಸಿದರು. ಪ್ರಶಸ್ತಿ ಆಯ್ಕೆಗಾಗಿ ಸಮಿತಿಯನ್ನು ರಚಿಸಲಾಗುವುದು. ಅರ್ಹರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ‌ ದಿನೇಶ್ ಗುಂಡೂರಾವ್, ಕರ್ನಾಟಕ ರಾಜ್ಯ ಬ್ರಾಹ್ಮಣ‌ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಆಸಗೋಡು ಜಯಸಿಂಹ, ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಎಸ್.ರಘುನಾಥ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ‌ ನಿರ್ದೇಶಕಿ ಕೆ.ಎಂ.ಗಾಯಿತ್ರಿ, ಡಾ.ಬಿ.ಎಸ್.ದ್ವಾರಕನಾಥ್, ವಿ.ಆರ್.ಗೌರಿಶಂಕರ್ ಹಾಗೂ ಇನ್ನಿತರ ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!