ಅರ್ಹ ಫಲಾನುಭವಿಗಳು ಪಂಚ ಗ್ಯಾರಂಟಿ ಯೋಜನೆಗಳಿಂದ ಹೊರಗುಳಿಯದಿರಲಿ: ರೆಡ್ಡಿ ಶ್ರೀನಿವಾಸ

Get real time updates directly on you device, subscribe now.

 : ಯಾವುದೇ ಅರ್ಹ ಫಲಾನುಭವಿಗಳು ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಂದ ಹೊರಗುಳಿಯದಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕೊಪ್ಪಳ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಹೇಳಿದರು.
 ಅವರು ಗುರುವಾರ ಕೊಪ್ಪಳ ಜಿಲ್ಲಾ ಪಂಚಾಯತ್‌ನ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂಬಂಧ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಜನ ಸಾಮಾನ್ಯರ ಏಳ್ಗೆಗಾಗಿ ರಾಜ್ಯ ಸರ್ಕಾರವು ಶಕ್ತಿ ಯೋಜನೆ, ಗೃಹಲಕ್ಷ್ಮಿ, ಅನ್ನಭಾಗ್ಯ, ಗೃಹಜ್ಯೋತಿ ಹಾಗೂ ಯುವನಿದಿ, ಈ ಮಹತ್ತರವಾದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಯೋಜನೆಗಳ ಅನುಷ್ಠಾನದಲ್ಲಿ ಕೊಪ್ಪಳ ಜಿಲ್ಲೆಯು ಉತ್ತಮ ಪ್ರಗತಿ ಸಾಧಿಸಿದೆ. ಜನಪರವಾದ ಈ ಕಾರ್ಯಕ್ರಮಗಳನ್ನು ಕೊಪ್ಪಳ ಜಿಲ್ಲೆಯಲ್ಲಿ ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಇವುಗಳ ಲಾಭವನ್ನು ಜಿಲ್ಲೆಯ ಪ್ರತಿಯೊಬ್ಬ ಅರ್ಹ ಫಲಾನುಭವಿಗಳಿಗೆ ದೊರಕಿಸಿಕೊಡಲು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.
ಜಿಲ್ಲೆಯಲ್ಲಿ ಇ-ಕೆವೈಸಿ ಮಾಡಿಸದ ಪಡಿತರ ಚೀಟಿಗೆ ಇ-ಕೆವೈಸಿ ಮಾಡಿಸುವುದಾಗಿ ನ್ಯಾಯಬೆಲೆ ಅಂಗಡಿಗಳ ಮೂಲಕವೆ ಸಾರ್ವಜನಿಕರಿಗೆ ಅರಿವು ಮೂಡಿಸಿ. ಪಡಿತರ ವಿತರಿಸುವ ಸಮಯವನ್ನು ಸರ್ಕಾರವು ಹೆಚ್ಚಿಸಿದ್ದು, ಅದರಂತೆ ಜಿಲ್ಲೆಯ ಎಲ್ಲಾ ನ್ಯಾಯಬೆಲೆ ಅಂಗಡಿಗಳು ಕಾರ್ಯನಿರ್ವಹಿಸುವಂತೆ ಸೂಚಿಸಿ, ಜನರಿಗೆ ಅನುಕೂಲ ಮಾಡಿಕೊಡಬೇಕು. ಆಹಾರ ಸಾಮಾಗ್ರಿಗಳ ವಿತರಣೆಗೂ ಮುನ್ನ ಅದರ ಗುಣಮಟ್ಟವನ್ನು ಪರಿಶೀಲಿಸಬೇಕು. ಗೃಹಜ್ಯೋತಿ ಯೋಜನೆಯಡಿ ನೋಂದಣಿಯಾಗದಿರುವ ಅರ್ಜಿಗಳನ್ನು ಪರಿಶೀಲಿಸಿ, ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಅವುಗಳನ್ನು ಸರಿಪಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ವಿದ್ಯುತ್ ಬಿಲ್ ಬಾಕಿ ವಸೂಲಾತಿ ಸಂದರ್ಭದಲ್ಲಿ ಜೆಸ್ಕಾಂ ಅಧಿಕಾರಿ, ಸಿಬ್ಬಂದಿಗಳು ಜನರೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಎಂದು ಸಂಬಂಧಿಸಿದ ಅಧಿಖಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಅವರು ಮಾತನಾಡಿ, ಕುಡಿಯುವ ನೀರಿನ ಯೋಜನೆಗಳು, ಅಂಗನವಾಡಿ ಕೇಂದ್ರಗಳು ಹಾಗೂ ಶಾಲೆಗಳ ವಿದ್ಯುತ್ ಬಿಲ್ ಬಾಕಿಯಿದ್ದಲ್ಲಿ, ಅವುಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಬಾರದು. ಲೈನ್‌ಮೆನ್‌ಗಳು ಹಾಗೂ ಸೆಕ್ಷನ್ ಅಧಿಕಾರಿಗಳು ಜನರೊಂದಿಗೆ ನಮ್ರತೆಯಿಂದ ನಡೆದುಕೊಳ್ಳಬೇಕೆಂದು ಜೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.
*ಐದು ಗ್ಯಾರಂಟಿ ಯೋಜನೆಗಳ ಪ್ರಗತಿ:* ಗೃಹಲಕ್ಷ್ಮೀ ಯೋಜನೆಯಡಿ ಕೊಪ್ಪಳ ಜಿಲ್ಲೆಯ 3,26,394 ಫಲಾನುಭವಿಗಳಿಗೆ ಮೇ-2025ರ ಅಂತ್ಯದವರೆಗೆ ಡಿಬಿಟಿ ಮೂಲಕ 1203,88,38,000 ರೂ.ಗಳನ್ನು ಪಾವತಿಸಲಾಗಿದೆ.
ಗೃಹಜ್ಯೋತಿ ಯೋಜನೆಯಡಿ ಜೂನ್-2025ರ ಅಂತ್ಯದವರೆಗೆ 2,76,653 ಗ್ರಾಹಕರಿಗೆ ಉಚಿತ ವಿದ್ಯುತ್ ಸೌಲಭ್ಯ ದೊರೆತಿದ್ದು, ಇದಕ್ಕಾಗಿ 295.8 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ.
ಕೊಪ್ಪಳ ಜಿಲ್ಲೆಯಲ್ಲಿ 37,224 ಅಂತ್ಯೋದಯ (ಎಎವೈ), 2,91,265 ಪಿ.ಹೆಚ್.ಹೆಚ್ (ಬಿಪಿಎಲ್) ಕಾರ್ಡ್ಗಳಿದ್ದು, ಅನ್ನಭಾಗ್ಯ ಯೋಜನೆಯಡಿ ಹಣದ ಬದಲಾಗಿ 2025ರ ಫೆಬ್ರವರಿ ಮಾಹೆಯಿಂದ ಇಲ್ಲಿಯವರೆಗೂ ಹೆಚ್ಚುವರಿ 5 ಕೆ.ಜಿ ಅಕ್ಕಿಯನ್ನು ವಿತರಿಸಲಾಗುತ್ತಿದೆ. ಇದರ ಜೊತೆಗೆ ಎಎವೈ ಮತ್ತು ಪಿ.ಹೆಚ್.ಹೆಚ್ (ಎನ್.ಎಫ್.ಎಸ್.ಎ ಸೆಂಟ್ರಲ್) ಕಾರ್ಡುಗಳಿಗೆ ಈ ಬಾರಿಯೂ ಜೋಳವನ್ನು ಸಹ ವಿತರಣೆ ಮಾಲಾಗುತ್ತಿದೆ.
ಶಕ್ತಿ ಯೋಜನೆಯಡಿ 2025ರ ಜೂನ್ ಮಾಹೆಯಲ್ಲಿ 33,94,421 ಮಹಿಳೆಯರು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದು, ಇದಕ್ಕಾಗಿ 13,41,19,435 ರೂ.ಗಳ ಖರ್ಚಾಗಿದೆ.
ಯುವನಿಧಿ ಯೋಜನೆಯಡಿ ಮೇ-2025ರಲ್ಲಿ 6,455 ಫಲಾನುಭವಿಗಳು ನೋಂದಣಿಯಾಗಿದ್ದು, ಮೇ ಅಂತ್ಯದವರೆಗೆ ಒಟ್ಟು ಮೊತ್ತ ರೂ. 15.17 ಕೋಟಿಗಳನ್ನು ಪಾವತಿಸಲಾಗಿರುತ್ತದೆ ಎಂದು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಎಸ್.ಬಿ.ಖಾದ್ರಿ, ಮಂಜುನಾಥ ಗೊಂಡಬಾಳ ಅಮರೇಶಪ್ಪ ಎಸ್.ಜಿ. ಮತ್ತು ನಾಗರಾಜ ಅರಳಿ ಹಾಗೂ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯರು ಹಾಗೂ ಜಿಲ್ಲೆಯ ವಿವಿಧ ತಾಲ್ಲೂಕುಗಳ ಅಧ್ಯಕ್ಷರು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಹಲವು ವಿಷಯಗಳ ಕುರಿತು ತಮ್ಮ ಸಲಹೆ ಸೂಚನೆಗಳನ್ನು ನೀಡಿದರು.
*ಪೋಸ್ಟರ್ ಬಿಡುಗಡೆ:* ಯುವನಿಧಿ ಯೋಜನೆಯ ಫಲಾನುಭವಿಗಳಿಗೆ ಯುವನಿಧಿ-ಪ್ಲಸ್ ಕಾರ್ಯಕ್ರಮದಡಿ ಹಮ್ಮಿಕೊಂಡಿರುವ ಕೌಶಲ್ಯ ತರಬೇತಿ ಮತ್ತು ಉದ್ಯಮಶೀಲತೆ ತರಬೇತಿಗಾಗಿ ನೋಂದಾಯಿಸಲು ಜಾಗೃತಿ ಮೂಡಿಸುವ ಪೋಸ್ಟರ್‌ಗಳನ್ನು ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಪ್ರಕಾಶ ವಿ. ಸೇರಿದಂತೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿಷಯ ನಿರ್ವಾಹಕರು ಸೇರಿದಂತೆ ಇತರರು ಉಪಸ್ಥಿತರಿದ್ದರು.
*ಅನ್ನ ಸುವಿದಾ ಯೋಜನೆಗೆ ಚಾಲನೆ:* ಸಭೆಯ ನಂತರ 75ವರ್ಷ ಮೇಲ್ಪಟ್ಟ ಹಿರಿಯ ಫಲಾನುಭವಿಗಳಿಗೆ ಮನೆಗೆ ಆಹಾರ ಸಾಮಾಗ್ರಿಗಳನ್ನು ತಲುಪಿಸುವ “ಅನ್ನ ಸುವಿಧಾ ಯೋಜನೆ”ಗೆ ಕೊಪ್ಪಳ ನಗರದ ಗಾಂಧಿ ವೃತ್ತದ ಬಳಿ ಇರುವ ಹಾಲಯ್ಯ ಹುಡೇಜಾಲಿ ಅವರ ನ್ಯಾಯ ಬೆಲೆ ಅಂಗಡಿಯಲ್ಲಿ ಕೊಪ್ಪಳ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಅವರ ನೇತೃತ್ವದಲ್ಲಿ ಅಕ್ಕಿ ಜೋಳ ಪರಿಶೀಲನೆ ಮಾಡಿ, ನಂತರ ಮ್ಯಾದಾರ ಓಣಿಯ ಫಲಾನುಭವಿಗಳ ಮನೆಗೆ ತೆರಳಿ ಹತ್ತು ಕೆಜಿ ಅಕ್ಕಿ ವಿತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಮಂಜುನಾಥ ಗೊಂಡಬಾಳ, ನಾಗರಾಜ ಅರಳಿ, ಅಮರೇಶ ಗಾಂಜಿ ಹಾಗೂ ಜಿಲ್ಲಾ ಸಮಿತಿ ಸದಸ್ಯರಾದ ಶಾರದಾ ಕಟ್ಟಿಮನಿ, ಸೋಮನಾಥ, ಮಲ್ಲಪ್ಪ ಜಕ್ಕಲಿ ಸುಧೀರ ಶಾಮಾಚಾರ, ಸಂಗಮೇಶ ಗುತ್ತಿ, ಆಹಾರ ಇಲಾಖೆ ಉಪನಿರ್ದೇಶಕ ಸೋಮಶೇಖರ ಬಿರಾದರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Koppal Ceo
Reddy Srinivas Gangavati

 

Get real time updates directly on you device, subscribe now.

Comments are closed.

error: Content is protected !!