ಮಾನಸಿಕ ಒತ್ತಡ ನಿವಾರಣೆಗೆ ಕ್ರೀಡೆಗಳು ಸಹಕಾರಿ- ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ

Get real time updates directly on you device, subscribe now.

 

: ಮಾನಸಿಕ ಒತ್ತಡ ನಿವಾರಣೆಗೆ ಕ್ರೀಡೆಗಳು ಸಹಕಾರಿಯಾಗಲಿದ್ದು, ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಕ್ರೀಡೆಯಲ್ಲಿ ಭಾಗವಹಿಸಿ ತಮ್ಮ ಆರೋಗ್ಯವನ್ನು ಸದೃಢವಾಗಿಟ್ಟುಕೊಳ್ಳಬೇಕು ಎಂದು ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು.
 ಅವರು ಶನಿವಾರ ಕೊಪ್ಪಳ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನ. 15 ರಿಂದ 17ರ ವರೆಗೆ ಹಮ್ಮಿಕೊಂಡಿದ್ದ ಪೊಲೀಸ್ ವಾರ್ಷಿಕ ಕ್ರೀಡಾಕೂಟ-2025ರ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಕರ್ನಾಟಕ ಪೊಲೀಸ್ ಎಂದರೆ ದಕ್ಷತೆ, ಸಮಯ ಪ್ರಜ್ಞೆ ಮತ್ತು ಕರ್ತವ್ಯ ಪ್ರಜ್ಞೆಗೆ ಹೆಸರಾಗಿದ್ದು, ಈ ದಿಶೆಯಲ್ಲಿ ಪೊಲೀಸರು ನಿರಂತರ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಪೊಲೀಸರಿಗೆ ವರ್ಷಪೂರ್ತಿ ಶಿಷ್ಠಾಚಾರ ಪಾಲನೆ, ಸಾರ್ವಜನಿಕರ ರಕ್ಷಣೆ, ಸೂಕ್ತ ಬಂದೋಬಸ್ತ್ ಮತ್ತು ಅಪರಾಧ ತನಿಖೆಯಂತಹ ಸಂದರ್ಭಗಳಲ್ಲಿ ಒತ್ತಡದಿಂದ ಕೆಲಸ ಮಾಡುವ ಅನಿವಾರ್ಯತೆ ಉಂಟಾಗುತ್ತದೆ. ಪೊಲೀಸರಿಗೆ ಮಾನಸಿಕ ಒತ್ತಡದಿಂದ ಹೊರಬರಲು ಇಂತಹ ಕ್ರೀಡಾಕೂಟಗಳು ಪೂರಕವಾಗಿವೆ ಎಂದರು.
ಕ್ರೀಡೆಯಲ್ಲಿ ಸೋಲು ಗೆಲವು ಮುಖ್ಯವಲ್ಲ. ಭಾಗವಹಿಸುವುದು ಮುಖ್ಯ. ಕ್ರೀಡಾ ಚಟುವಟಿಕೆಗಳು ದೈಹಿಕ ಸದೃಢತೆಯನ್ನು ಕಾಪಾಡುತ್ತವೆ. ಹಾಗಾಗಿ ಕ್ರೀಡಾಕೂಟದಲ್ಲಿ ಪ್ರತಿಯೊಬ್ಬ ಪೊಲೀಸರು ಭಾಗವಹಿಸಬೇಕು. ಕಚೇರಿ ಕೆಲಸದ ಜೊತೆಗೆ ಪ್ರತಿನಿತ್ಯ ಜ್ಞಾನ, ಯೋಗ, ವಾಕಿಂಗ್ ಮತ್ತು ಇತರೆ ಉತ್ತಮ ಆರೋಗ್ಯಕರ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು. ಎಷ್ಟೆ ಕೆಲಸದ ಒತ್ತಡದಲ್ಲಿದ್ದರು ಸಹ ನಿಮ್ಮ ಆರೋಗ್ಯದ ಮೇಲೆ ಗಮನವಿರಲಿ. ಹಾಗೆಯೇ ನಿಮ್ಮ ಕುಟುಂಬ ಮತ್ತು ನಿಮ್ಮ ಸ್ನೇಹಿತರಿಗೂ ಸಮಯವನ್ನು ನೀಡಿ ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್.ಅರಸಿದ್ಧಿ ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿ, ಆರೋಗ್ಯಪೂರ್ಣ ಜೀವನಕ್ಕೆ ಕ್ರೀಡೆಗಳು ಪೂರಕವಾಗಿದ್ದು, ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಪ್ರತಿವರ್ಷ ಕ್ರೀಡಾಕೂಟವನ್ನು ಆಯೋಜಿಸಲಾಗುತ್ತಿದೆ. ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಸಾಮರ್ಥ್ಯ ಪ್ರದರ್ಶಿಸಲು ಪೊಲೀಸರಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಪ್ರತಿಯೊಬ್ಬರು ಸ್ಪರ್ಧಾ ಮನೋಭಾವದಿಂದ ಕ್ರೀಡೆಗಳಲ್ಲಿ ಭಾಗವಹಿಸಬೇಕು. ಪೊಲೀಸ್ ಇಲಾಖೆಯ ಕ್ರೀಡಾಕೂಟಗಳು ಶಿಸ್ತುಬದ್ಧವಾಗಿ ನಡೆಯುತ್ತವೆ. ಎಲ್ಲಾ ಸ್ಪರ್ಧಿಗಳು ಮತ್ತು ತಂಡಗಳು ಇದನ್ನು ಗಮನದಲ್ಲಿಟ್ಟುಕೊಂಡು ನಿರ್ಣಾಯಕರು ನೀಡುವ ತೀರ್ಪಿಗೆ ಬದ್ಧರಾಗಿರಬೇಕು. ಮೂರು ದಿನಗಳ ಕಾಲ ನಡೆಯುವ ಈ ಕ್ರೀಡಾ ಕೂಟದಲ್ಲಿ ಎಲ್ಲರೂ ಸಕ್ರಿಯವಾಗಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಹೇಮಂತ್ ಕುಮಾರ್, ಕೊಪ್ಪಳ ಡಿವೈಎಸ್ಪಿ ಮುತ್ತಣ್ಣ ಸವರಗೋಳ, ಗಂಗಾವತಿ ಡಿವೈಎಸ್ಪಿ ಬಿ.ಎಸ್. ನೇಮಗೌಡ, ಸೈಬರ್ ವಿಭಾಗದ ಡಿವೈಎಸ್ಪಿ ಸಿದ್ದಲಿಂಗಪ್ಪಗೌಡ ಪಾಟೀಲ್, ಡಿವೈಎಸ್ಪಿ ಶಶಿಧರಯ್ಯ ಹಿರೇಮಠ ಸೇರಿದಂತೆ ಪೊಲೀಸ್ ಇಲಾಖೆಯ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳು, ನಿವೃತ್ತ ಪೊಲೀಸರು, ಸಾರ್ವಜನಿಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
*ಆಕರ್ಷಕ ಪಥಸಂಚಲನ:* ಕೊಪ್ಪಳ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ-2025ರ ಅಂಗವಾಗಿ ಪೊಲೀಸ್ ಇಲಾಖೆಯ ಒಟ್ಟು 8 ತಂಡಗಳಿಂದ ಆಕರ್ಷಕ ಪಥಸಂಚಲನ ಜರುಗಿತು.
*ವಿವಿಧ ಸ್ಪರ್ಧೆಗಳು:* ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟದ ಪ್ರಯುಕ್ತ ಶನಿವಾರದಂದು ಕೊಪ್ಪಳ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಸಿಬ್ಬಂದಿಗಳಿಗಾಗಿ 100 ಮೀಟರ್ ಓಟ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡು ಎಸೆತ, ಚಕ್ರ ಎಸೆತ ಮತ್ತು ಭರ್ಚಿ ಎಸತೆ (ಜಾವೆಲಿನ್ ಥ್ರೋ) ಮತ್ತು ಇತರೆ ಸ್ಪರ್ಧೆಗಳು ಹಾಗೂ ಪೊಲೀಸ್ ಅಧಿಕಾರಿಗಳಿಗಾಗಿ ಗುಂಡು ಎಸೆತ, ಚಕ್ರ ಎಸೆತ ಮತ್ತು ಭರ್ಚಿ ಎಸತೆ (ಜಾವೆಲಿನ್ ಥ್ರೋ) ಮತ್ತು ಇತರೆ ಸ್ಪರ್ಧೆಗಳು. ಗುಂಪು ಸ್ಪರ್ಧೆಗಳಲ್ಲಿ ಕಬಡ್ಡಿ, ವಾಲಿಬಾಲ್, ಹಗ್ಗ ಜಗ್ಗಾಟ ಮತ್ತು ಇತರೆ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದ್ದು, ನ. 16 ಮತ್ತು 17 ರಂದು 400 ಮೀ, 800 ಮೀ, 1500 ಮೀ, 5 ಸಾವಿರ ಮೀಟರ್ ಓಟ ಹಾಗೂ ಒಳಾಂಗಣ ಮತ್ತು ಹೊರಾಂಗಣ ಕ್ರೀಡೆಗಳು ನಡೆಯಲಿವೆ.

Get real time updates directly on you device, subscribe now.

Comments are closed.

error: Content is protected !!