ಶಾಸಕ ರಾಘವೇಂದ್ರ ಹಿಟ್ನಾಳ ಗೆ ಸಚಿವ ಸ್ಥಾನ ನೀಡದಿದ್ದರೇ ಸಾಮೂಹಿಕ ರಾಜೀನಾಮೆ – ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಾರಡ್ಡಿ ಗಲಬಿ

ಕೊಪ್ಪಳ
ಸತತ ಮೂರು ಬಾರಿ ಗೆಲವು ಸಾಧಿಸಿರುವ ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕ ರಾಘವೇಂದ್ರ ಹಿಟ್ನಾಳ ಅವರಿಗೆ ಸಚಿವ ಸ್ಥಾನ ನೀಡಿದ್ದರೇ ಕಾಂಗ್ರೆಸ್ ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ನೀಡುವುದಾಗಿ ಕೊಪ್ಪಳ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಾರಡ್ಡಿ ಗಲಬಿ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆಯನ್ನು ನೀಡಿರುವ ಅವರು, ಕೊಪ್ಪಳ ವಿಧಾನಸಭಾ ಕ್ಷೇತ್ರಕ್ಕೆ ಇದುವರೆಗೂ ಸಚಿವ ಸ್ಥಾನ ಸಿಕ್ಕಿಯೇ ಇಲ್ಲ. ಜಿಲ್ಲಾ ಕೇಂದ್ರಕ್ಕೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿದ್ದಾರೆ.
ಕೊಪ್ಪಳ ವಿಧಾನಸಭಾ ಕ್ಷೇತ್ರದಲ್ಲಿ ಇದುವರೆಗೂ ಹ್ಯಾಟ್ರಿಕ್ ಯಾರು ಸಹ ಬಾರಿಸಿಲ್ಲ. ಇದೇ ಮೊದಲ ಬಾರಿ ಶಾಸಕ ರಾಘವೇಂದ್ರ ಹಿಟ್ನಾಳ ಅವರು ಮೂರು ಬಾರಿ ಗೆಲುವು ಸಾಧಿಸಿ, ಹ್ಯಾಟ್ರಿಕ್ ಬಾರಿಸಿದ್ದಾರೆ. ಈ ಮೂಲಕ ಅವರಿಗೆ ಹಿರಿತನವೂ ಸಹ ಬಂದಿದ್ದು, ಜಿಲ್ಲೆಯ ಮತ್ತು ಕೊಪ್ಪಳ ವಿಧಾನ ಸಭಾ ಕ್ಷೇತ್ರದ ಹಿತದೃಷ್ಠಿಯಿಂದ ಪ್ರಸಕ್ತ ಸಚಿವ ಸಂಪುಟ ವಿಸ್ತರಣೆಯ ವೇಳೆಯಲ್ಲಿ ಸಚಿವ ಸ್ಥಾನ ನೀಡಲೇಬೇಕು. ಇಲ್ಲದಿದ್ದರೇ ನಾವು ಬ್ಲಾಕ್ ಕಾಂಗ್ರೆಸ್ ಪಕ್ಷದ ಎಲ್ಲ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆಯನ್ನು ನೀಡುತ್ತೇವೆ ಮತ್ತು ಸರ್ಕಾರದ ವಿರುದ್ಧವೇ ಹೋರಾಟ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಬೆಳವಣಿಗೆಯ ಹಿನ್ನೆಲೆಯಲ್ಲಿ ಪಕ್ಷ ಸಚಿವು ಸಂಪುಟ ಪುನರ್ ರಚನೆ ಅಥವಾ ವಿಸ್ತರಣೆ ಸೇರಿದಂತೆ ಯಾವುದೇ ಕ್ರಮವಹಿಸಿದರು ಮೊದಲ ಆದ್ಯತೆಯಲ್ಲಿ ಸಚಿವ ಸ್ಥಾನವನ್ನು ಶಾಸಕ ರಾಘವೇಂದ್ರ ಹಿಟ್ನಾಳ ಅವರಿಗೆ ನೀಡುವಂತೆ ಆಗ್ರಹಿಸಿದ್ದಾರೆ.
ರುಜುವಿನೊಂದಿಗೆ ಪತ್ರ – ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ ಅವರಿಗೆ ಮತ್ತು ಸಿ.ಎಂ. ಸಿದ್ದರಾಮಯ್ಯ ಅವರಿಗೆ ಈ ಕುರಿತು ಪತ್ರವನ್ನು ಎಲ್ಲ ಪದಾಧಿಕಾರಿಗಳ ರುಜುವಿನೊಂದಿಗೆ ಕಳುಹಿಸಿಕೊಡಲಾಗುವುದು. ಹಾಗೆಯೇ ಪಕ್ಷದ ಹೈಕಮಾಂಡ್ ಗಮನಕ್ಕೂ ತರಲಾಗುವುದು ಎಂದು ಹೇಳಿದ್ದಾರೆ.
ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ ಅವರು ಪಕ್ಷವನ್ನು ಸಂಘಟಿಸುವಲ್ಲಿ ಹೆಚ್ಚು ಮುತುವರ್ಜಿ ವಹಿಸುತ್ತಾರೆ. ಅಷ್ಟೇ ಅಲ್ಲಾ ಅಭಿವೃದ್ಧಿಯ ವಿಷಯದಲ್ಲಿಯೂ ಹಿಂದೆ ಬಿದ್ದಿಲ್ಲ. ಕೊಪ್ಪಳ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭದ್ರಬುನಾದಿ ಹಾಕಿದ್ದಾರೆ. ಹೀಗಾಗಿ, ಜಿಲ್ಲೆಯಲ್ಲಿ ಸೇರಿದಂತೆ ರಾಜ್ಯಾದ್ಯಂತ ಪಕ್ಷದ ಸಂಘಟನೆಗೆ ಹಾಗೂ ಅಭಿವೃದ್ಧಿಗಾಗಿ ಇವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದ್ದಾರೆ.