ಅನೈತಿಕ ಚಟುವಟಿಕೆಗಳ ವಿರುದ್ಧ ನಿಷ್ಪಕ್ಷಪಾತ ತನಿಖೆಗೆ ಬಿಜೆಪಿ ಆಗ್ರಹ
koppal ಭಾರತೀಯ ಜನತಾ ಪಾರ್ಟಿ ವತಿಯಿಂದ ಕೊಪ್ಪಳ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಅನೈತಿಕ ಚಟುವಟಿಕೆಗಳು ಹಾಗೂ ಗಂಭೀರ ಸ್ವರೂಪ ಪಡೆದುಕೊಂಡಿರುವ “ಲವ್ ಜಿಹಾದ್” ಪ್ರಕರಣಗಳ ಕುರಿತು ತೀವ್ರ ಆತಂಕ ಮತ್ತು ಖಂಡನೆಯನ್ನು ವ್ಯಕ್ತಪಡಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ರೀತಿಯ ಘಟನೆಗಳು ನಮ್ಮ ಸಮಾಜದ ನೈತಿಕ ಮೌಲ್ಯಗಳಿಗೆ ಧಕ್ಕೆ ತರುವುದಲ್ಲದೆ, ಮಹಿಳೆಯರ ಗೌರವ, ಭದ್ರತೆ ಹಾಗೂ ಕುಟುಂಬಗಳ ನಂಬಿಕೆಗೆ ದೊಡ್ಡ ಪೆಟ್ಟು ನೀಡುತ್ತಿರುವುದು ಅತ್ಯಂತ ವಿಷಾದನೀಯ ಹಾಗೂ ಆತಂಕಕಾರಿ ಬೆಳವಣಿಗೆಯಾಗಿದೆ. ಪ್ರೀತಿಯ ಪವಿತ್ರ ಭಾವನೆಯನ್ನು ದುರುಪಯೋಗಪಡಿಸಿಕೊಂಡು ನಡೆಯುತ್ತಿರುವ ಮೋಸ, ಮಾನಸಿಕ ಹಾಗೂ ಸಾಮಾಜಿಕ ದೌರ್ಜನ್ಯಗಳು ಯಾವುದೇ ರೀತಿಯಲ್ಲೂ ಸಹಿಸಿಕೊಳ್ಳಲಾಗದವು.

ಸಂವಿಧಾನ ಬದ್ಧ ಕಾನೂನು ವ್ಯವಸ್ಥೆಯ ಮೇಲೆ ಸಂಪೂರ್ಣ ನಂಬಿಕೆ ಇಟ್ಟು, ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಹಾಗೂ ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ಸೂಕ್ತ ಕಾನೂನು ಕ್ರಮಗಳನ್ನು ತಕ್ಷಣ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಜಿಲ್ಲೆಯಲ್ಲಿನ ಮಹಿಳೆಯರ ಸುರಕ್ಷತೆ, ಗೌರವ ಮತ್ತು ಆತ್ಮವಿಶ್ವಾಸ ಕಾಪಾಡಲು ವಿಶೇಷ ಕ್ರಮ ರೂಪಿಸಬೇಕಿದೆ ಎಂದು ಮನವಿಯಲ್ಲಿ ವಿನಂತಿಸಿಕೊಂಡಿದ್ದಾರೆ..
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಹೇಮಲತಾ ನಾಯಕ್, ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ನವೀನ ಗುಳಗಣ್ಣನವರ್, ಡಾ. ಬಸವರಾಜ ಕ್ಯಾವತರ್,ನಗರ ಬಿಜೆಪಿ ಮಂಡಲದ ಅಧ್ಯಕ್ಷರಾದ ಅಮರೇಶ ಮುರುಳಿ, ಭಾರತೀಯ ಜನತಾ ಪಾರ್ಟಿ ಅನೇಕ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.