ಕುಷ್ಟಗಿ : 
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರ 50 ವರ್ಷಗಳ ಸಾರ್ಥಕ ರಾಜಕೀಯ ಬದುಕಿನ ಗೌರವಾರ್ಥವಾಗಿ ಮೇ 9ರಂದು ಚಿತ್ರದುರ್ಗದಲ್ಲಿ ಏರ್ಪಡಿಸಲಾಗಿರುವ ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಅಭಿಮಾನಿಗಳು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವಿಧಾನಸಭಾ ವಿರೋಧ ಪಕ್ಷದ ಮುಖ್ಯ ಸಚೇತಕ ಹಾಗೂ ಶಾಸಕ ದೊಡ್ಡನಗೌಡ ಎಚ್. ಪಾಟೀಲ ಅವರು ಮನವಿ ಮಾಡಿದ್ದಾರೆ.
ಈ ಕುರಿತು ಕುಷ್ಟಗಿ ಪಟ್ಟಣದ ಹೊರವಲಯ ತಮ್ಮ ಅಂಜನಾದ್ರಿ ಕಾರ್ಯಾಲಯದಲ್ಲಿ ಗುರುವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,
ಬಿಎಸ್ ಯಡಿಯೂರಪ್ಪ ಅವರು ನಾಡು ಕಂಡ ಅಪರೂಪದ ರಾಜಕಾರಣಿ. ಸಮಾಜಮುಖಿ ಹೋರಾಟಗಳ ಮುಖಾಂತರ ರಾಜಕೀಯಕ್ಕೆ ಬಂದ ಇವರು, ನಾಲ್ಕು ಬಾರಿ ಮುಖ್ಯಮಂತ್ರಿಯಾಗಿ ಸಲ್ಲಿಸಿದ ಸೇವೆ ಅವಿಸ್ಮರಣೀಯ. ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತಂದು ಪಕ್ಷ ಸಂಘಟನೆಯನ್ನು ರಾಜ್ಯದ ಮೂಲೆ ಮೂಲೆಗೂ ವಿಸ್ತರಿಸಿದ ಶ್ರೇಯಸ್ಸು ಬಿಎಸ್ ಯಡಿಯೂರಪ್ಪ ಅವರಿಗೆ ಸಲ್ಲುತ್ತದೆ ಎಂದು ಬಣ್ಣಿಸಿದರು.
ದೇಶದಲ್ಲಿ ಮೊದಲ ಬಾರಿ ರೈತರಿಗಾಗಿ ಪ್ರತ್ಯೇಕ ಕೃಷಿ ಬಜೆಟ್ ಮಂಡಿಸಿದ ಹೆಗ್ಗಳಿಕೆಗೆ ಬಿಎಸ್ವೈ ಅವರು ಪಾತ್ರರಾಗಿದ್ದಾರೆ. ರೈತರಿಗೆ ಶೂನ್ಯ ಬಡ್ಡಿದರ ಸಾಲ, ನೀರಾವರಿ ಯೋಜನೆಗಳಿಗೆ ವೇಗ, ಬೆಳೆ ಪರಿಹಾರ ವಿತರಣೆಯಲ್ಲಿ ಪಾರದರ್ಶಕತೆ ಸೇರಿದಂತೆ ಹಲವು ರೈತಪರ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದರು. ಬಡ ಹೆಣ್ಣು ಮಕ್ಕಳಿಗಾಗಿ ಭಾಗ್ಯಲಕ್ಷ್ಮೀ ಯೋಜನೆ, ಸೈಕಲ್ ವಿತರಣೆ, ಸಂದ್ಯಾಸುರಕ್ಷಾದಂತಹ ಅನೇಕ ಜನಪರ ಯೋಜನೆಗಳ ಮೂಲಕ ಜನಮನ ಗೆದ್ದಿದ್ದಾರೆ ಎಂದರು.
ಈ ವೊಂದು ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವ ಆಯಾ ಜಿಲ್ಲೆಗಳ ಅಭಿಮಾನಿಗಳು, ಕಾರ್ಯಕರ್ತರಿಗೆ ಪ್ರತ್ಯೇಕವಾಗಿ ವಾಹನ ನಿಲುಗಡೆ ಸೇರಿದಂತೆ ಮಜ್ಜಿಗೆ, ಬಾಳೆಹಣ್ಣು ವ್ಯವಸ್ಥೆ ಕಲ್ಪಿಸಲಾಗಿದೆ. ಮತ್ತು ನಮ್ಮ ತಾಲೂಕು ಸೇರಿದಂತೆ ರಾಜ್ಯಾದ್ಯಂತ ಸಾವಿರಾರು ಸ್ವಾಮೀಜಿಗಳು ಈ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಲಿದ್ದಾರೆ. ನಮ್ಮ ತಾಲುಮೂಕಿನಿಂದ ಆಯಾ ಗ್ರಾಮ ಪಂಚಾಯಿತಿ ವಾರು ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಅಭಿಮಾನಿಗಳು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಈ ಮೂಲಕ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.