ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಜನತಾ ದರ್ಶನ ಯಶಸ್ವಿ

Get real time updates directly on you device, subscribe now.

* ಜಿಲ್ಲಾ ಉಸ್ತುವಾರಿ ಸಚಿವರಿಂದ ಅಹವಾಲು ಸ್ವೀಕಾರ

* ಬೆಳಗ್ಗೆ 10ರಿಂದ ಸಂಜೆವರೆಗೆ 267 ಅರ್ಜಿಗಳ ಸ್ವೀಕಾರ

ಕೊಪ್ಪಳ, ಸೆ. 25

ಮಾನ್ಯ ಮುಖ್ಯಮಂತ್ರಿಗಳ ಮಹತ್ವದ ಕಾರ್ಯಕ್ರಮವಾದ ಜನತಾ ದರ್ಶನವು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಮೊಟ್ಟಮೊದಲ ಬಾರಿಗೆ ಜಿಲ್ಲಾ ಕೇಂದ್ರ ಕೊಪ್ಪಳ ಜಿಲ್ಲೆಯಲ್ಲಿ ಸಹ ಸೆಪ್ಟೆಂಬರ್ 25ರಂದು ಯಶಸ್ವಿಯಾಗಿ ನೆರವೇರಿತು.
ಪೂರ್ವನಿಗದಿಯಂತೆ ಬೆಳಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ ಸುತ್ತಲು ಆಳವಡಿಸಿದ್ದ ವಿವಿಧ ಕೌಂಟರಗಳಲ್ಲಿ ಕಂದಾಯ, ಆರೋಗ್ಯ, ಜಿಲ್ಲಾ ಪಂಚಾಯತ್ ಮತ್ತು ಸರ್ವೆ ಸೇರಿದಂತೆ ನಾನಾ ಇಲಾಖೆಗಳಿಗೆ ಸಂಬಂಧಿಸಿದ ಸಾರ್ವಜನಿಕ ಅಹವಾಲು ಸ್ವೀಕಾರ ಪ್ರಕ್ರಿಯೆ ಆರಂಭಗೊಂಡಿತು.

ಬಳಿಕ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರೂ ಆದ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರು ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಜನತಾ ದರ್ಶನ ಕಾರ್ಯಕ್ರಮಕ್ಕೆ ದೀಪ ಬೆಳಗಿಸುವ ಮೂಲಕ ವಿದ್ಯುಕ್ತ್ ಚಾಲನೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಇವರಿಂದ ಹಮ್ಮಿಕೊಂಡಿದ್ದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರು, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಹೋರಾಟಗಾರರು, ಕಲಾವಿದರು, ಸಾಹಿತಿಗಳು, ಮಹಿಳೆಯರು, ವಿದ್ಯಾರ್ಥಿಗಳು, ಯುವಜನರು ಸೇರಿದಂತೆ ಇನ್ನೀತರರು ತಮ್ಮ ನಾನಾ ಅಹವಾಲುಗಳನ್ನು ಸಚಿವರಿಗೆ ಸಲ್ಲಿಸಿದರು.
ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರ ಸಮ್ಮುಖದಲ್ಲಿ ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಅಹವಾಲು ಆಲಿಸಿದ ಸಚಿವರು, ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಿದರು. ಬೆಳಗ್ಗೆ 10 ರಿಂದ ಸಂಜೆ 5 ಗಂಟೆ ನಂತರವೂ ಸುಧೀರ್ಘ ಅವಧಿವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ್ದು ವಿಶೇಷವಾಗಿತ್ತು. ಮಧ್ಯಾಹ್ನ ಊಟದ ಸಮಯವರೆಗೆ 163 ಅರ್ಜಿಗಳು ಸ್ವೀಕೃತವಾಗಿದ್ದವು. ಊಟದ ವಿರಾಮದ ನಂತರ ಸಂಜೆವರೆಗೆ ಒಟ್ಟು 267 ಅರ್ಜಿಗಳು ಸ್ವೀಕೃತವಾದವು. ಮುಂದಿನ ಕ್ರಮಕ್ಕಾಗಿ ಈ ಅರ್ಜಿಗಳನ್ನು ಐಪಿಜಿಆರ್‌ಎಸ್ ತಂತ್ರಾಂಶದಲ್ಲಿ ಅಳವಡಿಸಲಾಯಿತು.

*ಇಲಾಖೆಗಳಿಗೆ ವರ್ಗಾವಣೆ:* ಕೊಪ್ಪಳ ತಾಲೂಕು ಸೇರಿದಂತೆ ಗಂಗಾವತಿ, ಯಲಬುರ್ಗಾ, ಕನಕಗಿರಿ, ಕುಷ್ಟಗಿ, ಕುಕನೂರ, ಕಾರಟಗಿ ತಾಲೂಕಿನ ವಿವಿಧ ಗ್ರಾಮಗಳ ಸಾರ್ವಜನಿಕರು ಸಲ್ಲಿಸಿದ ಮನವಿ, ಅಹವಾಲನ್ನು ಸಾವಧಾನದಿಂದ ಆಲಿಸಿದ ಸಚಿವರು, ಪರಿಹಾರಕ್ಕೆ ಕೆಲವು ಅರ್ಜಿಗಳನ್ನು ಸಂಬಂಧಿಸಿದ ಇಲಾಖೆಗಳಿಗೆ ವರ್ಗಾಯಿಸಲು ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರಿಗೆ ಸಚಿವರು ಸೂಚನೆ ನೀಡಿದರು.

*ಸರ್ಕಾರದ ಕಾರ್ಯಕ್ಕೆ ಮೆಚ್ಚುಗೆ:* ಜನತಾ ದರ್ಶನ ಕಾರ್ಯಕ್ರಮಕ್ಕೆ ಆಗಮಿಸಿದ ಜಿಲ್ಲೆಯ ವೃದ್ಧೆಯೊಬ್ಬರು ವೇದಿಕೆಯತ್ತ ಆಗಮಿಸಿ ಸಚಿವರಿಗೆ, ಶಾಸಕರಿಗೆ ಅಧಿಕಾರಿಗಳಿಗೆ ನಮಸ್ಕರಿಸಿದರು. ಸರ್ಕಾರವು ಜಾರಿಮಾಡಿದ ಶಕ್ತಿ ಯೋಜನೆಯಿಂದಾಗಿ ಮತ್ತು ಗೃಹ ಲಕ್ಷ್ಮಿ ಯೋಜನೆಯಿಂದಾಗಿ ವಿಶೇಷವಾಗಿ ಮಹಿಳೆಯರಿಗೆ ಸಾಕಷ್ಟು ಅನುಕೂಲವಾಗಿದೆ. ಸರ್ಕಾರಕ್ಕೆ ಅಭಿನಂದನೆಗಳನ್ನು ತಿಳಿಸುವೆ ಎಂದು ಜನತಾ ದರ್ಶನ ವೇದಿಕೆಯಲ್ಲಿ ಮಾತನಾಡಿ ಸಂತಸ ವ್ಯಕ್ತಪಡಿಸಿದರು.
*ಪೋಟೋ ತೆಗೆಯಿಸಿಕೊಂಡ ಫಲಾನುಭವಿ*: ವಿಕಲಚೇತರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ತ್ರಿಚಕ್ರ ವಾಹನ ಸೌಲಭ್ಯ ಪಡೆದ ವಿಕಲಚೇತನ ಫಲಾನುಭವಿ ಬಿಎ ಪದವೀಧರ ಚಂದ್ರಶೇಖರ ಅವರು ವೇದಿಕೆಗೆ ಬಂದು ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಮತ್ತು ಅಧಿಕಾರಿಗಳೊಂದಿಗೆ ಜನತಾ ದರ್ಶನ ವೇದಿಕೆಯಲ್ಲಿ ಭಾವಚಿತ್ರ ಪಡೆದುಕೊಂಡದ್ದು ವಿಶೇಷವಾಗಿತ್ತು.
*ಅಧಿಕಾರಿಗಳ ಸಮ್ಮುಖದಲ್ಲಿ ಪರಿಶೀಲನೆ*: ಜನತಾ ದರ್ಶನ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಹಾಗೂ ತಾಲೂಕುಮಟ್ಟದ ಅಧಿಕಾರಿಗಳು ಹಾಜರಿದ್ದು ಅರ್ಜಿಗಳನ್ನು ಪರಿಶೀಲಿಸಿದರು. ಅರ್ಜಿಗಳನ್ನು ಕಾಲಮಿತಿಯೊಳಗಡೆ ವಿಲೇಮಾಡಬೇಕು ಎಂದು ಇದೆ ವೇಳೆ ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

*ಕೌಂಟರ್ ವ್ಯವಸ್ಥೆ*: ಜನತಾ ದರ್ಶನ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಡಳಿತ ಭವನದಲ್ಲಿ ಅರ್ಜಿ ಸ್ವೀಕಾರಕ್ಕೆ ಅಗತ್ಯ ಸಂಖ್ಯೆಯಲ್ಲಿ ಕೌಂಟರಗಳನ್ನು ತೆರೆಯಲಾಗಿತ್ತು. ತಲಾ 5 ಇಲಾಖೆಗಳಿಗೆ ಒಂದರಂತೆ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಅಹವಾಲುಗಳ ದಾಖಲಾತಿಗಾಗಿ ಒಟ್ಟು 5 ಕೌಂಟರಗಳ ವ್ಯವಸ್ಥೆ ಮಾಡಲಾಗಿತ್ತು.
*ಅಧಿಕಾರಿಗಳು ಸಿಬ್ಬಂದಿಯ ನಿಯೋಜನೆ:* ಸಾರ್ವಜನಿಕರಿಂದ ಸ್ವೀಕೃವಾದ ಅರ್ಜಿಗಳನ್ನು ಐಪಿಜಿಆರ್‌ಎಸ್ ತಂತ್ರಾಂಶದಲ್ಲಿ ಅಳವಡಿಸಿ ಸಂಬಂಧಿಸಿದ ಇಲಾಖೆಗೆ ವರ್ಗಾಯಿಸುವ ನಿಟ್ಟಿನಲ್ಲಿ ಅಗತ್ಯ ಸಂಖ್ಯೆಯಲ್ಲಿ ಗಣಕಯಂತ್ರಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಿ ಅಗತ್ಯ ವ್ಯವಸ್ಥೆ ಮಾಡಲಾಗಿತ್ತು.

ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಜಿಲ್ಲಾಧಿಕಾರಿ ನಳಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆಯ, ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ ಕಡಿ,‌ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ಸುನೀಲ್ ವಂಟಗೋಡಿ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಮಲ್ಲಪ್ಪ ತೊದಲಬಾಗಿ, ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ನಾಗರಾಜ ಜುಮ್ಮಣ್ಣನವರ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!
%d bloggers like this: