ಆಡಳಿತ ವ್ಯವಸ್ಥೆ ಇನ್ನಾದರೂ ಎಚ್ಚೆತ್ತುಕೊಳ್ಳಲಿ: ಸಿವಿಸಿ

ಕೊಪ್ಪಳ: ತುಂಗಭದ್ರಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆಯ ಮೇಲೆ ನಡೆದ ಅಪಘಾತದಲ್ಲಿ ಆರು ಜನ ಸಾವನ್ನಪ್ಪಿರುವುದಕ್ಕೆ ಹಲವು ಕಾರಣಗಳಿವೆ. ಅದರಲ್ಲಿ ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯವೂ ಒಂದು ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ ವಿ ಚಂದ್ರಶೇಖರ್ ಟೀಕಿಸಿದ್ದಾರೆ.
“ದಿನದಿಂದ ದಿನಕ್ಕೆ ಹುಲಿಗೆಮ್ಮ ದೇವಸ್ಥಾನಕ್ಕೆ ಬರುವ ಭಕ್ತಾದಿಗಳ ಸಂಖ್ಯೆಯಲ್ಲಿ ಭಾರಿ ಹೆಚ್ಚಳವಾಗುತ್ತಿದೆ. ಕೆಲವೊಂದು ಕಡೆ ರಸ್ತೆಗಳು ಕಿರಿದಾಗಿವೆ. ರಸ್ತೆ ಅಗಲೀಕರಣ, ಸೇತುವೆ ನಿರ್ಮಾಣ ಕಾಮಗಾರಿಗಳು ಪ್ರಗತಿಯಲ್ಲಿವೆ. ಸೇತುವೆ ಎರಡೂ ಬದಿಗಳು ಅಪಘಾತ ವಲಯಗಳಲ್ಲಿ ಬರುತ್ತದೆ. ಇಂತಹ ಪ್ರದೇಶಗಳಲ್ಲಿ ಸಂಚಾರಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೆ ಇರುವುದರಿಂದ ಇಂತಹ ದುರಂತಗಳು ಸಂಭವಿಸುತ್ತಿವೆ,” ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸರಕು ಸಾಗಣೆ ವಾಹನಗಳಲ್ಲಿ ಜನರನ್ನು ಹತ್ತಿಸಿಕೊಂಡು ಬರುವುದು ಹಾಗೂ ಟಿಪ್ಪರ್ ಲಾರಿಗಳು ವೇಗವಾಗಿ ಚಲಿಸುವುದು ಸಾಮಾನ್ಯವಾಗಿದೆ. ಸಂಚಾರಿ ನಿಯಮ ಉಲ್ಲಂಘನೆ ವಿರುದ್ಧ ಪೊಲೀಸ ಇಲಾಖೆ ಕಟ್ಟುನಿಟ್ಟನ ಕ್ರಮ ಕೈಗೊಂಡಿದ್ದರೇ ಈ ರೀತಿಯ ಅಪಘಾತಗಳನ್ನು ತಪ್ಪಿಸಬಹುದಿತ್ತು. ಅಪಘಾತ ವಲಯಗಳಲ್ಲಿ ಸಂಚಾರಿ ಪೊಲೀಸರ ನಿಯೋಜನೆ, ಸಾರಿಗೆ ಇಲಾಖೆಯ ಅಧಿಕಾರಿಗಳ ತಪಾಸಣೆ, ವೇಗದ ಮೇಲೆ ಮಿತಿ ಪಾದಚಾರಿಗಳಿಗೆ ಪ್ರತ್ಯೇಕ ಪಥ ಮತ್ತು ರಸ್ತೆ ಸುರಕ್ಷತಾ ಹಾಗೂ ಎಚ್ಚರಿಕೆ ಫಲಕಗಳನ್ನು ರಸ್ತೆ ಬದಿಗಳಲ್ಲಿ ಅಳವಡಿಸುವಂತಹ ಕ್ರಮಗಳನ್ನು ಈ ಕೂಡಲೇ ಕೈಗೊಳ್ಳಬೇಕು. ಹುಲಿಗಿಯ ಕಡೆಗೆ ಹೋಗುವ ಕಿರಿದಾದ ರಸ್ತೆಗಳ ಅಗಲೀಕರಣ ಮತ್ತು ದ್ವಿಮುಖ ಸಂಚಾರ ವ್ಯವಸ್ಥೆಯನ್ನು ಈ ಕೂಡಲೇ ಮಾಡಬೇಕೆಂದು ಅವರು ಒತ್ತಾಯಿಸಿದ್ದಾರೆ.
Comments are closed.