ಮಾಜಿ ಸಚಿವ ಶಿವರಾಜ್ ಎಸ್. ತಂಗಡಗಿ ಅವರಿಗೆ ಸಚಿವ ಸ್ಥಾನ ನೀಡಲು ಭೋವಿ ಸಮಾಜದ ಆಗ್ರಹ

ಕೊಪ್ಪಳ : ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮಾಜಿ ಸಚಿವರಾದ ಶಿವರಾಜ್ ಎಸ್. ತಂಗಡಗಿ ಅವರನ್ನು ಸಚಿವ ಸಂಪುಟದ ಉಳಿದ ಎರಡು ವರ್ಷಗಳ ಅವಧಿಗೆ ಪುನಃ ಸಚಿವರನ್ನಾಗಿ ಮಾಡಬೇಕೆಂದು ಭೋವಿ ಸಮಾಜ ಮತ್ತು ಮುಖಂಡರು ಸುದ್ಧಿಗೋಷ್ಠಿಯ ಮೂಲಕ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಕರ್ನಾಟಕ ನಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ಧಿಗೋಷ್ಠಿಯ ಮೂಲಕ ಸರ್ಕಾರವನ್ನು ಒತ್ತಾಯಿಸಿ ಭೋವಿ ಸಮಾಜವನ್ನು ರಾಜ್ಯ ಮಟ್ಟದಲ್ಲಿ ಒಗ್ಗೂಡಿಸುವಲ್ಲಿ ಶಿವರಾಜ್ ಎಸ್. ತಂಗಡಗಿ ಅವರ ಪಾತ್ರ ಪ್ರಮುಖವಾಗಿದ್ದು, ಸಮಾಜದ ಗುರುಗಳಾದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮಿಗಳ ಸನ್ನಿಧಿಯಲ್ಲಿ ಬಾಗಲಕೋಟೆ ಹಾಗೂ ಚಿತ್ರದುರ್ಗದಲ್ಲಿ ಬೃಹತ್ ಸಮಾವೇಶಗಳನ್ನು ಯಶಸ್ವಿಯಾಗಿ ಸಂಘಟಿಸಿದ್ದರು. ಅಂದಿನ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಹಾಗೂ ಕೇಂದ್ರ ಮತ್ತು ರಾಜ್ಯ ಸಚಿವರನ್ನು ಒಳಗೊಂಡ ಕಾರ್ಯಕ್ರಮಗಳ ಮೂಲಕ ಸಮಾಜದ ಒಗ್ಗಟ್ಟನ್ನು ಅವರು ಪ್ರದರ್ಶಿಸಿದ್ದರು.
ಕೊಪ್ಪಳ, ಬಳ್ಳಾರಿ, ರಾಯಚೂರು ಹಾಗೂ ಆಂಧ್ರ-ತೆಲಂಗಾಣ ಭಾಗದ ಜೀವನಾಡಿಯಾದ ತುಂಗಭದ್ರಾ ಜಲಾಶಯದ 19ನೇ ಕ್ರೆಸ್ಟ್ ಗೇಟ್ ಕೊಚ್ಚಿಹೋದಾಗ ರೈತರು ತೀವ್ರ ಆತಂಕಕ್ಕೆ ಒಳಗಾಗಿದ್ದರು. ಇದನ್ನು ಮನಗಂಡ ಮಾಜಿ ಸಚಿವ ತಂಗಡಗಿ ಅವರು, ಯುದ್ಧೋಪಾದಿಯಲ್ಲಿ ಟಿ.ಬಿ. ಡ್ಯಾಂನಲ್ಲಿ ಹಗಲು-ರಾತ್ರಿ ಶ್ರಮವಹಿಸಿ, ತಾಂತ್ರಿಕ ತಜ್ಞರ ಸಹಕಾರದೊಂದಿಗೆ ಹಾಗೂ ಟಿ.ಬಿ. ಬೋರ್ಡ್ ಅಧೀನದಲ್ಲಿ ಎಲ್ಲಾ ಕೆಲಸಗಳನ್ನು ಯಶಸ್ವಿಯಾಗಿ ನಿರ್ವಹಿಸಿದರು. ನಿಗದಿತ ಸಮಯಕ್ಕಿಂತ ಮುಂಚಿತವಾಗಿಯೇ ಶ್ರಮದಾಯಕ ಗೇಟ್ ಅಳವಡಿಕೆ ಕಾರ್ಯವನ್ನು ಪೂರ್ಣಗೊಳಿಸಿ ರೈತರ ಹಿತ ಕಾಯ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಹಾಗೂ ಸಾಮಾಜಿಕ ನ್ಯಾಯದ ಅಡಿಯಲ್ಲಿ ಅವರಿಗೆ ಉಳಿದ 2 ವರ್ಷಗಳ ಅವಧಿಗೆ ಮಂತ್ರಿ ಮಂಡಲದಲ್ಲಿ ಸ್ಥಾನ ಕಲ್ಪಿಸಿಕೊಡಬೇಕೆಂದು ಸಮಾಜ ಆಗ್ರಹಿಸಿದೆ.
ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಸಚಿವರಾಗಿ ಅವರು ಅತ್ಯಂತ ಯಶಸ್ವಿಯಾಗಿ ಕೆಲಸ ನಿರ್ವಹಿಸಿದ್ದು, ತಮ್ಮ ಅವಧಿಯಲ್ಲಿ ಯಾವುದೇ ಭ್ರಷ್ಟಾಚಾರದ ಕಪ್ಪು ಚುಕ್ಕೆ ಇಲ್ಲದಂತೆ, ಅತ್ಯಂತ ಪ್ರಾಮಾಣಿಕವಾಗಿ ಇಲಾಖೆಯನ್ನು ಮುನ್ನಡೆಸಿದ್ದಾರೆ. ಇದರೊಂದಿಗೆ ಕಾಂಗ್ರೆಸ್ ಪಕ್ಷವನ್ನು ಜಿಲ್ಲಾ ಮಟ್ಟದಲ್ಲಿ ಯಶಸ್ವಿಯಾಗಿ ಸಂಘಟಿಸಿರುವ ತಂಗಡಗಿ ಅವರು, ಕಳೆದೆರಡು ಲೋಕಸಭಾ ಚುನಾವಣೆಯಲ್ಲಿ ತಮಗೆ ನೀಡಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. ದೇಶದಲ್ಲಿ ನರೇಂದ್ರ ಮೋದಿ ಅವರ ಅಲೆಯಲ್ಲಿಯೂ ರಾಜಶೇಖರ್ ಹಿಟ್ನಾಳ್ ಅವರ ಗೆಲುವಿಗೆ ಹಾಗೂ ಕಾಂಗ್ರೆಸ್ ಅಭ್ಯರ್ಥಿಯ ವಿಜಯಕ್ಕೆ ತೀವ್ರ ಶ್ರಮವಹಿಸಿ ಯಶಸ್ಸು ತಂದುಕೊಟ್ಟಿದ್ದಾರೆ. ಈ ಎಲ್ಲಾ ಕಾರಣಗಳಿಂದಾಗಿ ಮಾಜಿ ಸಚಿವ ಶಿವರಾಜ್ ಎಸ್. ತಂಗಡಗಿ ಅವರಿಗೆ ಉಳಿದ 2 ವರ್ಷಗಳ ಅವಧಿಗೆ ಸಚಿವ ಸ್ಥಾನ ನೀಡುವುದು ಸೂಕ್ತ ಎಂದು ಸಮಾಜದ ಮುಖಂಡರು ಪತ್ರಿಕಾ ಗೋಷ್ಠಿಯ ಮೂಲಕ ಮುಖ್ಯಮಂತ್ರಿಗಳಿಗೆ ಹಾಗೂ ಪಕ್ಷದ ಹೈಕಮಾಂಡ್ಗೆ ಮನವಿ ಮಾಡಿದ್ದಾರೆ.