ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮವಹಿಸಿ : ಅಮೀನಸಾಬ ಅತ್ತಾರ್
ತಾ.ಪಂ ಆಡಳಿತಾಧಿಕಾರಿಗಳ ನೇತೃತ್ವದಲ್ಲಿ ಜರುಗಿದ ಸಾಮಾನ್ಯ ಸಭೆ

ಕನಕಗಿರಿ: ಸಕಾಲಕ್ಕೆ ಮಳೆಯಾಗದೇ ಬರಗಾಲ ಪರಿಸ್ಥಿತಿ ಇರುವುದರಿಂದ ಗ್ರಾಮಗಳಲ್ಲಿ ಯಾವುದೇ ಕಾರಣಕ್ಕೂ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಪಿಡಿಓ ರವರು ಕ್ರಮವಹಿಸಬೇಕು ಎಂದು ತಾಲೂಕು ಪಂಚಾಯತ್ ಆಡಳಿತಾಧಿಕಾರಿಗಳು ಮತ್ತು ಮುಖ್ಯ ಲೆಕ್ಕಾಧಿಕಾರಿಗಳಾದ ಅಮೀನಸಾಬ ಅತ್ತಾರ್ ಅವರು ಸೂಚಿಸಿದರು.

ಅವರು, ಕನಕಗಿರಿ ತಾ.ಪಂ ಸಭಾಂಗಣದಲ್ಲಿ ಬುಧವಾರ ನಡೆದ ಕನಕಗಿರಿ ಹಾಗೂ ಕಾರಟಗಿ ತಾ.ಪಂ ಗಳ ಸಾಮಾನ್ಯ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಚತೆಯನ್ನು ಕಾಪಾಡಬೇಕು. ನೀರಿನ ಪೈಪ್ ಲೈನ್ ಗಳನ್ನು ಸರಿಪಡಿಸುವುದು ಸೇರಿದಂತೆ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಗಮನಹರಿಸುವಂತೆ ಸೂಚಿಸಿದರು.
ನಂತರ ಆರೋಗ್ಯ ಇಲಾಖೆಯ ಪ್ರಗತಿ ವರದಿಯನ್ನು ಪರಿಶೀಲಿಸಿ, ಗ್ರಾಮೀಣಾ ಭಾಗದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗಳು ಹಾಗೂ ಗ್ರಾ.ಪಂ ಪಿಡಿಓರವರು ಕ್ರಿಯಾಶೀಲರಾಗಿ ಕೆಲಸ ನಿರ್ವಹಿಸುವಂತೆ ತಿಳಿಸಿದರು.
ಅಲ್ಲದೇ, ಚರಂಡಿಗಳ ಸ್ವಚ್ಚತೆ, ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಸ್ಥಳಗಳಲ್ಲಿ ಬ್ಲೀಚಿಂಗ್ ಪೌಡರ್ ಹಾಕುವುದು. ಸೊಳ್ಳೆಗಳ ನಿಯಂತ್ರಣಕ್ಕೆ ಫಾಗಿಂಗ್ ಮಾಡುವುದು ಸೇರಿದಂತೆ ಆರೋಗ್ಯದ ಕುರಿತು ಗ್ರಾಮಸ್ಥರಲ್ಲಿ ಅರಿವು ಮೂಡಿಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದರು. ಬಳಿಕ ವಿವಿಧ ಇಲಾಖೆಯ ಅಧಿಕಾರಿಗಳು ತಮ್ಮ ಪ್ರಗತಿ ವರದಿಯನ್ನು ಮಂಡಿಸಿದರು.
ಈ ಸಂದರ್ಭದಲ್ಲಿ ಕನಕಗಿರಿ ತಾ.ಪಂ ಇಓ ಕೆ.ರಾಜಶೇಖರ್, ಕಾರಟಗಿ ತಾ.ಪಂ ಇಓ ಲಕ್ಷ್ಮೀದೇವಿ, ಸಹಾಯಕ ನಿರ್ದೇಶಕ (ಪಂ.ರಾ) ವೀರಣ್ಣ ನಕ್ರಳ್ಳಿ, ಕಾರಟಗಿ ತಾಲೂಕು ಯೋಜನಾಧಿಕಾರಿ ರಾಘವೇಂದ್ರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳು, ತಾ.ಪಂ ಸಿಬ್ಬಂದಿಗಳು ಹಾಜರಿದ್ದರು.
Comments are closed.