ಅನಧಿಕೃತ ಸಭೆಗೆ ತೆರಳದಂತೆ ರಾಜ್ಯಾಧ್ಯಕ್ಷ ಸೋಮನಗೌಡ ಕರೆ
ಪಂಚಮಸಾಲಿ ಸಂಘದ ಅಧಿಕೃತ ಸಭೆ ಸೆಪ್ಟೆಂಬರ್ 20ಕ್ಕೆ

ಕೊಪ್ಪಳ: ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ರಾಜ್ಯಮಟ್ಟದ ಸಾಮಾನ್ಯ ಸಭೆಯನ್ನು ಬರುವ ಸೆಪ್ಟೆಂಬರ್ 20ರ ಭಾನುವಾರ ಬೆಳಿಗ್ಗೆ 10 ಗಂಟೆಗೆ ಹರಿಹರದ ಶಿವಮೊಗ್ಗ ರಸ್ತೆಯಲ್ಲಿರುವ ಹೆಚ್.ಕೆ. ವೀರಪ್ಪ ಸಭಾಭವನದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಸೋಮನಗೌಡ ಎಂ. ಮಾಲಿಪಾಟೀಲ ತಿಳಿಸಿದ್ದಾರೆ.
ಶುಕ್ರವಾರ ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘದ ಉಚ್ಛಾಟಿತ ಪ್ರಧಾನ ಕಾರ್ಯದರ್ಶಿಯವರು ಆಗಸ್ಟ್ 9ರಂದು ಕರೆದಿರುವ ಸಭೆ ನಿಯಮಬಾಹಿರ ಹಾಗೂ ಕಾಯ್ದೆಬದ್ಧವಲ್ಲ ಎಂದು ಸ್ಪಷ್ಟಪಡಿಸಿದರು. ಸಂಘದ ಕಾರ್ಯಕಾರಿ ಸಮಿತಿ ಸಭೆಯನ್ನು ಕರೆಯಲು ರಾಜ್ಯಾಧ್ಯಕ್ಷರ ಅನುಮತಿ ಕಡ್ಡಾಯವಾಗಿದ್ದು, ಅನುಮತಿ ಇಲ್ಲದೆ ಕರೆದಿರುವ ಸಭೆ ಕಾನೂನುಬಾಹಿರವಾಗಿದೆ. ಹೀಗಾಗಿ ಈ ಅನಧಿಕೃತ ಸಭೆಯಲ್ಲಿ ಸಮಾಜದ ಪದಾಧಿಕಾರಿಗಳು ಹಾಗೂ ಸದಸ್ಯರು ಯಾರೂ ಭಾಗವಹಿಸಬಾರದು ಎಂದು ಮನವಿ ಮಾಡಿದರು.
ಸಂಘದಲ್ಲಿ ಸುಮಾರು 48 ಕೋಟಿ ರೂಪಾಯಿ ವ್ಯವಹಾರ ನಡೆದಿದ್ದು, ಅದಕ್ಕೆ ಸಂಬಂಧಿಸಿದ ಲೆಕ್ಕಪತ್ರಗಳ ಮಾಹಿತಿಯನ್ನು ಸಾಮಾನ್ಯ ಸಭೆಯಲ್ಲಿ ನೀಡಲಾಗುವುದು. ಸಂಘ ಹಾಗೂ ಪೀಠದಲ್ಲಿ ಗೊಂದಲ ಸೃಷ್ಟಿಸುವವರು ಎಷ್ಟೇ ಪ್ರಭಾವಿಯಾಗಿದ್ದರೂ ಅವರಿಗೆ ಮುಂದುವರಿಯಲು ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದರು. ರಾಜ್ಯದಲ್ಲಿ ಸುಮಾರು 80 ಲಕ್ಷ ಪಂಚಮಸಾಲಿ ಸಮಾಜ ಬಾಂಧವರಿದ್ದು, ಎಲ್ಲರನ್ನೂ ಒಗ್ಗೂಡಿಸಿ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಈ ಸಾಮಾನ್ಯ ಸಭೆಯನ್ನು ಕರೆಯಲಾಗಿದೆ. ಸಮಾಜದ ಪ್ರತಿಯೊಬ್ಬರೂ ತಪ್ಪದೇ ಸಭೆಯಲ್ಲಿ ಭಾಗವಹಿಸಬೇಕೆಂದು ಕೋರಿದರು.
ಸಂಘದ ಸದಸ್ಯತ್ವ ಅಭಿಯಾನ ಪ್ರಸ್ತುತ ಚಾಲ್ತಿಯಲ್ಲಿದ್ದು, ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ಪಡೆದುಕೊಳ್ಳಬೇಕು. ಸೆಪ್ಟೆಂಬರ್ 20ರ ಸಾಮಾನ್ಯ ಸಭೆಯಲ್ಲಿ ಸಂಘದ ಬೈಲಾದಲ್ಲಿ ಅಗತ್ಯ ತಿದ್ದುಪಡಿ ತರುವ ಕುರಿತು ಆಲೋಚಿಸಲಾಗಿದ್ದು, ಸದಸ್ಯರು ತಮ್ಮ ಸೂಕ್ತ ಸಲಹೆ-ಸೂಚನೆಗಳನ್ನು ನೀಡಬಹುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರಗೌಡ ಪಾಟೀಲ, ಜಿಲ್ಲಾಧ್ಯಕ್ಷ ಬಸವನಗೌಡ ತೊಂಡಿಹಾಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೇವರಾಜ ಹಾಲಸಮುದ್ರ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.
Comments are closed.