ನೂತನ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಮನವಿ-ಸಂಸದ ಕೆ. ರಾಜಶೇಖರ ಹಿಟ್ನಾಳ

Get real time updates directly on you device, subscribe now.


— ಸಂಸದ ಕೆ. ರಾಜಶೇಖರ ಹಿಟ್ನಾಳ ಅವರಿಂದ ಸಚಿವರಿಗೆ ಮನವಿ
— ನವೋದಯ ವಿದ್ಯಾಲಯದ ಮೂಲ ಸೌಕರ್ಯಕ್ಕೆ ಅನುದಾನ ನೀಡುವಂತೆ ಮನವಿ
— ಕೇಂದ್ರ ಸಚಿವರಿಂದ ಸಕಾರಾತ್ಮಕ ಸ್ಪಂದನೆ

ಕೊಪ್ಪಳ: ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಸಿಂಧನೂರು ತಾಲೂಕಿನಲ್ಲಿ ನೂತನ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಅನುಮೋದನೆ ಸೇರಿದಂತೆ ನವೋದಯ ಹಾಗೂ ಕೇಂದ್ರೀಯ ವಿದ್ಯಾಲಯಗಳ ಮೂಲಭೂತ ಸೌಕರ್ಯಕ್ಕೆ ಅನುದಾನ ನೀಡುವಂತೆ ಮಾನವ ಸಂಪನ್ಮೂಲ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಕೊಪ್ಪಳ ಸಂಸದ ಕೆ. ರಾಜಶೇಖರ ಹಿಟ್ನಾಳ ಮಂಗಳವಾರ ಮನವಿ ಪತ್ರ ಸಲ್ಲಿಸಿದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೊಪ್ಪಳ ಹಿಂದುಳಿದ ಜಿಲ್ಲೆಯಾಗಿದ್ದು, ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿ ತೀರ ಹಿಂದುಳಿದಿದೆ. ಅಲ್ಲದೇ ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಕೊಪ್ಪಳ ಜಿಲ್ಲೆ 25ನೇ ಸ್ಥಾನದಲ್ಲಿದೆ. ಹೀಗಾಗಿ ಶೈಕ್ಷಣಿಕ ಪ್ರಗತಿಗಾಗಿ ಕೊಪ್ಪಳ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಸಿಂಧನೂರಿನಲ್ಲಿ ಕೇಂದ್ರಿಯ ವಿದ್ಯಾಲಯ ಸ್ಥಾಪನೆಗೆ ಅನುಮೋದನೆ ನೀಡುವ ಮೂಲಕ ಬಹುದಿನದ‌ಕನಸು ಈಡೇರಿಸುವಂತೆ ಒತ್ತಾಯಿಸಿದರು.

ಜಿಲ್ಲೆಯ ಕುಕನೂರು ತಾಲೂಕಿನಲ್ಲಿ ಪ್ರಧಾನಮಂತ್ರಿ ಶ್ರೀ ಜವಾಹರ ನವೋದಯ ವಿದ್ಯಾಲಯವನ್ನು1986-87 ರಲ್ಲಿ ಸುಮಾರು 30 ಎಕರೆ ಪ್ರದೇಶದಲ್ಲಿ ಸ್ಥಾಪಿಸುವ ಮೂಲಕ ನಮ್ಮ ಭಾಗದ ಶೈಕ್ಷಣಿಕ ಹಸಿವು ನೀಗಿಸುವ ಕೆಲಸ ಮಾಡಿದೆ. ಸಧ್ಯ ನವೋದಯ ವಿದ್ಯಾಲಯ ನಿರ್ಮಾಣಗೊಂಡು 33 ವರ್ಷ ಪೂರೈಸಿದ್ದು,ಅನೇಕ ಕೊಠಡಿಗಳು ಶಿಥಿಲಗೊಂಡಿವೆ. ಈ ನಿಟ್ಟಿನಲ್ಲಿ ನಾಗರಿಕ ಮೂಲಭೂತ ಸೌಕರ್ಯಗಳಾದ ವಿದ್ಯಾರ್ಥಿ ನಿಲಯ, ತರಗತಿ ಕೊಠಡಿಗಳು, ಸಿಬ್ಬಂದಿ ವಸತಿಗೃಹ, ರಸ್ತೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಸುಮಾರು 118 ಕೋಟಿ ರೂಪಾಯಿ ಅನುದಾನವನ್ನು 2024-25ನೇ ಶೈಕ್ಷಣಿಕ ವರ್ಷದಲ್ಲೇ ಮಂಜೂರು ಮಾಡುವಂತೆ ಮನವಿ ಪತ್ರ ಸಲ್ಲಿಸಲಾಗಿದೆ. ಅಲ್ಲದೇ ಕೊಪ್ಪಳ ನಗರದ ಕೇಂದ್ರೀಯ ವಿದ್ಯಾಲಯ ಹಾಗೂ ಗಂಗಾವತಿಯ ಕೇಂದ್ರೀಯ ವಿದ್ಯಾಲಯದಲ್ಲಿ ತಲಾ 500ಕ್ಕೂ ಅಧಿಕ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳಗೊಂಡಿದ್ದರಿಂದ
‌ಸಂಸ್ಥೆಯಲ್ಲಿ ಮೂಲಭೂತ ಸೌಕರ್ಯಗಳ ಸಮಸ್ಯೆ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಕೊಪ್ಪಳ ಹಾಗೂ ಗಂಗಾವತಿಯ ಕೇಂದ್ರೀಯ ವಿದ್ಯಾಲಯಗಳಲ್ಲಿ ಮೂಲಭೂತ ಅವಶ್ಯವಿರುವ ಸುಸಜ್ಜಿತ ಪ್ರಯೋಗಾಲಯ, ಡಿಜಿಟಲ್ ಗ್ರಂಥಾಲಯ, ಕಂಪ್ಯೂಟರ್ ಲ್ಯಾಬ್, ಆಟದ ಮೈದಾನ, ಶುದ್ಧ ಕುಡಿಯುವ ನೀರು ಹಾಗೂ ರಸ್ತೆ ಅಭಿವೃದ್ಧಿಗಾಗಿ ಒಟ್ಟು 15 ಕೋಟಿ ಅನುದಾನ ಮಂಜೂರು ಮಾಡುವಂತೆ ಕೇಂದ್ರ ಸಚಿವರಿಗೆ ಮನವಿ ಮಾಡಲಾಗಿದೆ.

ಕೇಂದ್ರ ಮಾನವ ಸಂಪನ್ಮೂಲ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಂದ ಸಕಾರಾತ್ಮಕ ಸ್ಪಂದನೆ ಸಿಕ್ಕಿದ್ದು, ಕೊಪ್ಪಳ ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿ ಬದ್ಧವಾಗಿದ್ದು, ಶಿಕ್ಷಣದ ಪ್ರಗತಿಗೆ ಸಂಪೂರ್ಣ ಸಹಕಾರ ನೀಡುತ್ತೇವೆ ಎಂದಿದ್ದಾರೆ. ಶೀಘ್ರವೇ ಕುಕನೂರಿನ ನವೋದಯ ವಿದ್ಯಾಲಯ, ಕೊಪ್ಪಳ ಹಾಗೂ ಗಂಗಾವತಿಯ ಕೇಂದ್ರೀಯ ವಿದ್ಯಾಲಯಕ್ಕೆ ಅವಶ್ಯವಿರುವ ಅನುದಾನ ಬಿಡುಗಡೆಗೊಳಿಸುವ ಭರವಸೆ ನೀಡಿದ್ದಾರೆ ಎಂದು ಸಂಸದ ಕೆ. ರಾಜಶೇಖರ ಹಿಟ್ನಾಳ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಫೋಟೋ ಕ್ಯಾಪ್ಸನ್: ದೆಹಲಿಯ ಮಾನವ ಸಂಪನ್ಮೂಲ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಸಂಸದ ಕೆ. ರಾಜಶೇಖರ ಹಿಟ್ನಾಳ ಅವರು ಮಂಗಳವಾರ ಮನವಿ ಪತ್ರ ಸಲ್ಲಿಸಿದರು.

ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಸಿಂಧನೂರಿನಲ್ಲಿ ಹೊಸ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಅನುಮೋದನೆ ನೀಡುವಂತೆ ಕೇಂದ್ರ ಸಚಿವರಿಗೆ ಮನವಿ ಮಾಡಿದ್ದು, ಸಚಿವರಿಂದ ಸಕಾರಾತ್ಮಕ
ಸ್ಪಂದನೆ ಸಿಕ್ಕಿದೆ. ಶೀಘ್ರದಲ್ಲೇ ಸಿಂಧನೂರು ಜನತೆಗೆ ಸಿಹಿಸುದ್ದಿ ನೀಡುವೆ.

Get real time updates directly on you device, subscribe now.

Comments are closed.

error: Content is protected !!
%d bloggers like this: