ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ & ಬಿ ವೃಂದದ ಹುದ್ದೆಗಳ ಪರೀಕ್ಷೆಗೆ ಅಗತ್ಯ ಸಿದ್ಧತೆಗೆ ಕೈಗೊಳ್ಳಿ: ಸಿದ್ರಾಮೆಶ್ವರ

Get real time updates directly on you device, subscribe now.

: 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ `ಎ’ ಮತ್ತು `ಬಿ’ ವೃಂದದ ಹುದ್ದೆಗಳ ಭರ್ತಿಗಾಗಿ ನಡೆಯುವ ಪರೀಕ್ಷೆಗಳಿಗೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೆಶ್ವರ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
 ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ `ಎ’ ಮತ್ತು `ಬಿ’ ವೃಂದದ ಹುದ್ದೆಗಳ ಪರೀಕ್ಷೆಗಳ ಹಿನ್ನೆಲೆಯಲ್ಲಿ ಆಗಸ್ಟ್ 23ರಂದು ಜಿಲ್ಲಾಡಳಿತ ಭವನದ ಕೆಸ್ವಾನ್ ವೀಡಿಯೋ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕರ್ನಾಟಕ ಲೋಕಸೇವಾ ಆಯೋಗವು ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ `ಎ’ ಮತ್ತು `ಬಿ’ ವೃಂದದ ಹುದ್ದೆಗಳ ಭರ್ತಿಗಾಗಿ ಪೂರ್ವಭಾವಿ ಪರೀಕ್ಷೆಗಳನ್ನು ಆಗಸ್ಟ್ 27ರಂದು ಕೊಪ್ಪಳ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದು, ಈ ಪರೀಕ್ಷೆಗಳಿಗಾಗಿ ಜಿಲ್ಲೆಯ ಒಟ್ಟು 18 ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ವ್ಯವಸ್ಥೆಯನ್ನು ಈಗಾಗಲೇ ಮಾಡಿಕೊಳ್ಳಲಾಗಿದೆ. ಪರೀಕ್ಷೆಗೂ ಮೊದಲು ಪರೀಕ್ಷಾ ಗೌಪ್ಯ ಸಾಮಾಗ್ರಿಗಳನ್ನು ಖಜಾನೆಯಿಂದ ಸ್ವೀಕರಿಸಿ, ಪರೀಕ್ಷಾ ಕೇಂದ್ರಕ್ಕೆ ಸಾಗಿಸುವಾಗ ಮತ್ತು ಪರೀಕ್ಷೆ ಮುಗಿದ ನಂತರ ಪರೀಕ್ಷಾ ಕೇಂದ್ರಗಳಿಂದ ಖಜಾನೆಗೆ ಗೌಪ್ಯ ಸಾಮಗ್ರಿಗಳನ್ನು ಸಾಗಿಸುವಾಗ ಪ್ರತಿ ಮಾರ್ಗಕ್ಕೆ ಸಶಸ್ತ್ರ ಪೊಲೀಸ್ ಸಿಬ್ಬಂದಿಯೊಂದಿಗೆ ಭದ್ರತೆಯನ್ನು ಒದಗಿಸಬೇಕು. ಪರೀಕ್ಷಾ ಕೇಂದ್ರಗಳ ಸುತ್ತಲು ಸೂಕ್ತ ಪೊಲೀಸ್ ಬಂದೋಬಸ್ತ್, ಪರೀಕ್ಷಾ ಗೌಪ್ಯ, ಸಾಮಾಗ್ರಿಗಳ ಸ್ವೀಕಾರ, ಸಂರಕ್ಷಣೆ ವಿತರಣೆಯೊಂದಿಗೆ ಜಿಲ್ಲೆಯಲ್ಲಿ ಈ ಪರೀಕ್ಷೆಗಳನ್ನು ಸುಗಮವಾಗಿ ಮತ್ತು ಸುವ್ಯವಸ್ಥಿತವಾಗಿ ನಡೆಸಬೇಕಿದೆ. ಈ ಹಿನ್ನೆಲೆಯಲ್ಲಿ ಪರೀಕ್ಷಾ ಆವರಣ ಮತ್ತು ಕೊಠಡಿಗಳಲ್ಲಿ ಕಡ್ಡಾಯವಾಗಿ ಸಿ.ಸಿ. ಕ್ಯಾಮರಾ ಅಳವಡಿಸಿರುವ ಕುರಿತು ಸಂಬಂಧಿಸಿದ ಅಧಿಕಾರಿಗಳು ಪರಿಶೀಲಿಸಿ, ಧೃಡಪಡಿಸಿಕೊಳ್ಳಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಪರೀಕ್ಷಾ ಅಕ್ರಮಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು. ಅಗತ್ಯವಿದ್ದಲ್ಲಿ ವೆಬ್ ಕ್ಯಾಮರಾಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಿ ಎಂದರು.
ಪರೀಕ್ಷಾರ್ಥಿಗಳ ಸಂಬAಧಿಗಳು ಪರೀಕ್ಷಾ ಸಂಬಂಧಿತ ಕಾರ್ಯದಲ್ಲಿ ಭಾಗವಹಿಸದಂತೆ ಕಡ್ಡಾಯವಾಗಿ ಧೃಡಪಡಿಸಿಕೊಳ್ಳಬೇಕು. ಸ್ಮಾರ್ಟ್ ಫೋನ್ ಮತ್ತು ಇತರೆ ಯಾವುದೇ ಮೊಬೈಲ್‌ಗಳನ್ನು ಪರೀಕ್ಷಾ ಕೇಂದ್ರಗಳಲ್ಲಿ ತರದಂತೆ ಪರೀಕ್ಷಾ ಉಸ್ತುವಾರಿ ಅಧಿಕಾರಿಗಳು ನೋಡಿಕೊಳ್ಳಬೇಕು. ಯಾವುದೇ ತರಹದ ಮೊಬೈಲ್, ಕ್ಯಾಲ್ಕುಲೇಟರ್, ಎಲೆಕ್ಟ್ರಾ ನಿಕ್ ವಾಚ್ (ಯಾವುದೇ ರೀತಿಯ ಕೈಗಡಿಯಾರ), ಮೈಕ್ರೋಪೋನ್, ಬ್ಲೂಟುತ್ ಹಾಗೂ ಇತರೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ನಿಷೇಧಿಸಬೇಕು. ಪ್ರತಿ ಪರೀಕ್ಷಾ ಕೊಠಡಿಯಲ್ಲಿ ಸಮಯ ಪಾಲನೆಗಾಗಿ ಗೋಡೆ ಗಡಿಯಾರಗಳನ್ನು ಅಳವಡಿಸಿ. ಪರೀಕ್ಷಾ ಕೇಂದ್ರಗಳಿಗೆ ಅನಧಿಕೃತ ವ್ಯಕ್ತಿಗಳು ಪ್ರವೇಶಿಸಿದಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಪ್ರಶ್ನೆ ಪತ್ರಿಕೆಗಳ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಿಗೆ ಉತ್ತೇಜನ ನೀಡುವಂತಹ ವ್ಯಕ್ತಿಗಳ ವಿರುದ್ಧ ಅಗತ್ಯವಾದ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳುವುದು ಹಾಗೂ ಕಾಲಕಾಲಕ್ಕೆ ಗಸ್ತು ಪಡೆಯನ್ನು ನಿಯೋಜಿಸಿ ಯಾವುದೇ ಅಕ್ರಮ ಅಹಿತಕರ ಘಟನೆಗಳು ನಡೆಯದಂತೆ ಕ್ರಮ ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಲ್ಲಾ ಖಜಾನೆ ಇಲಾಖೆಯ ಉಪನಿದೇಶಕರು, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಅಧಿಕಾರಿಗಳು, ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಮತ್ತಿತರರಿದ್ದರು.

Get real time updates directly on you device, subscribe now.

Comments are closed.

error: Content is protected !!
%d bloggers like this: