ಸೆ. 14ರಂದು ಕರವೇ ಯಿಂದ ಒತ್ತಾಯಪೂರ್ವಕ ಹಿಂದಿ ಹೇರಿಕೆ ವಿರುದ್ಧ ಹೋರಾಟ
ಕೊಪ್ಪಳ,ಸೆ.13: ಕರ್ನಾಟಕ ರಕ್ಷಣಾ ವೇದಿಕೆ ಕೊಪ್ಪಳ ಜಿಲ್ಲಾ ಘಟಕದಿಂದ ಸೆಪ್ಟೆಂಬರ್ 14 ರಂದು ಕೇಂದ್ರ ಸರ್ಕಾರದ ಒತ್ತಾಯಪೂರ್ವಕ ಹಿಂದಿ ಹೇರಿಕೆ ವಿರುದ್ಧ ರಾಜ್ಯಾದ್ಯಂತ ಹೋರಾಟ ನಡೆಸಲು ವೇದಿಕೆ ಕೇಂದ್ರ ಸಮಿತಿ ತೀರ್ಮಾನಿಸಿದ್ದು, ಜಿಲ್ಲಾ ಘಟಕವು ಸೆ.14ರಂದು ಬೆಳಿಗ್ಗೆ: 11:00 ಗಂಟೆಗೆ ಕೇಂದ್ರೀಯ ಬಸ್ ನಿಲ್ದಾಣದ ಹತ್ತಿರವಿರುವ ಶ್ರೀ ಕನಕದಾಸ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಉದ್ದೇಶಿಸಲಾಗಿದೆ ಎಂದು ಕರವೇ ಜಿಲ್ಲಾಧ್ಯಕ್ಷ ಬಿ.ಗಿರೀಶಾನಂದ ಜ್ಞಾನಸುಂದರ ತಿಳಿಸಿದ್ದಾರೆ.
ಕೇಂದ್ರ ಸರ್ಕಾರವು ಹಲವಾರು ವರ್ಷಗಳಿಂದ ಸೆಪ್ಟೆಂಬರ್ 14 ರಂದು ಹಿಂದಿ ದಿವಸ್ ಎಂದು ಆಚರಣೆ ಮಾಡುತ್ತಾ ಬಂದಿದೆ. ದಶಕಗಳಿಂದ ಕರ್ನಾಟಕ ರಕ್ಷಣಾ ವೇದಿಕೆ ಕೇಂದ್ರ ಸರ್ಕಾರದ ಎಲ್ಲಾ ಇಲಾಖೆಗಳ ಮುಂದೆ ಪ್ರತಿಭಟನೆ ನಡೆಸಿ ಹಿಂದಿ ಸಪ್ತಾಹ ಮಾಡದಂತೆ ಪ್ರತಿರೋಧಿಸಿ ಹೋರಾಟ ಮಾಡುತ್ತಾ ಬಂದಿದ್ದರೂ ಸಹ ಕೇಂದ್ರ ಸರ್ಕಾರ ಹಟಕ್ಕೆ ಬಿದ್ದಂತೆ ಪ್ರತಿ ವರ್ಷದಂತೆ ಈ ವರ್ಷವೂ ಸಪ್ತಾಹ ಆಚರಿಸುತ್ತಿರುವುದು ಖೇಧಕರ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು ನಗರದಲ್ಲಿ ಯಾವುದೇ ಬ್ಯಾಂಕುಗಳು, ಶಾಲಾ-ಕಾಲೇಜುಗಳು, ರೈಲ್ವೆ ಇಲಾಖೆ ಹಾಗೂ ಅಂಚೆ ಕಚೇರಿಗಳಲ್ಲಿ ಸೆಪ್ಟೆಂಬರ್ 14ರಂದು ಹಿಂದಿ ಸಪ್ತಾಹ ಅಥವಾ ಹಿಂದಿ ದಿವಸ್ ಹೆಸರಲ್ಲಿ ಯಾವುದೇ ಕಾರ್ಯಕ್ರಮ ನಡೆಸಿದರೆ ಕಚೇರಿಗಳ ಮೇಲೆ ದಾಳಿ ನಡೆಸಲಾಗುವುದೆಂದು ಕರವೇ ಜಿಲ್ಲಾಧ್ಯಕ್ಷ ಬಿ.ಗಿರೀಶಾನಂದ ಜ್ಞಾನಸುಂದರ ಪ್ರಕಟಣೆಯ ಮೂಲಕ ಎಚ್ಚರಿಸಿದ್ದಾರೆ.