ಕೊಪ್ಪಳ ಜಿಲ್ಲೆಯಲ್ಲಿ ಸೇನಾ ನೇಮಕಾತಿ ರ‍್ಯಾಲಿ: ವಿವಿಧ ಸಮಿತಿಗಳ ರಚನೆ

ಸೇನಾ ನೇಮಕಾತಿ ರ‍್ಯಾಲಿ

0

Get real time updates directly on you device, subscribe now.

 

 ಕೊಪ್ಪಳ ಜಿಲ್ಲೆಯಲ್ಲಿ ನಡೆಯುವ ಸೇನಾ ನೇಮಕಾತಿ ರ‍್ಯಾಲಿ ಸಂಬಂಧ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ವಿವಿಧ ಸಮಿತಿಗಳನ್ನು ರಚಿಸಿ ಜವಾಬ್ದಾರಿ ಹಂಚಿಕೆ ಮಾಡಿದ್ದಾರೆ.
ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ನವೆಂಬರ್ 26 ರಿಂದ ಡಿಸೆಂಬರ್ 08ರ ವರೆಗೆ ನಡೆಯುವ ಸೇನಾ ನೇಮಕಾತಿ ರ‍್ಯಾಲಿಯಲ್ಲಿ ಕರ್ನಾಟಕ ರಾಜ್ಯದ ಬೆಳಗಾವಿ, ಕಲಬುರಗಿ, ಕೊಪ್ಪಳ, ಯಾದಗಿರಿ, ಬೀದರ್ ಮತ್ತು ರಾಯಚೂರು ಸೇರಿ ಈ ಆರು ಜಿಲ್ಲೆಗಳಿಂದ ಅಂದಾಜು 9130 ಅಭ್ಯರ್ಥಿಗಳು ಭಾಗವಹಿಸಲಿದ್ದಾರೆ. ಕಾರಣ ಈ ರ‍್ಯಾಲಿಯು ಯಶಸ್ವಿಗೊಳ್ಳಲು ಕೊಪ್ಪಳ ಜಿಲ್ಲಾಡಳಿತ ವತಿಯಿಂದ ಅಗತ್ಯ ಸಹಕಾರ ನೀಡುವ ನಿಟ್ಟಿನಲ್ಲಿ ವಿವಿಧ ಸಮಿತಿಗಳಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ನಿಯೋಜಿತಗೊಂಡ ಅಧಿಕಾರಿ, ಸಿಬ್ಬಂದಿಯವರು ತಮಗೆ ವಹಿಸಲಾಗುವ ಕಾರ್ಯಗಳನ್ನು ತಪ್ಪದೇ ನಿರ್ವಹಿಸುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.
*ವೇದಿಕೆ ಸಮಿತಿ:* ಕೊಪ್ಪಳ ಸಹಾಯಕ ಆಯುಕ್ತರು ಅಧ್ಯಕ್ಷತೆಯಲ್ಲಿ ವೇದಿಕೆ ಸಮಿತಿಯನ್ನು ರಚಿಸಲಾಗಿದ್ದು, ಈ ಸಮಿತಿಯಲ್ಲಿ ಕೊಪ್ಪಳ ನಗರಸಭೆ ಆಯುಕ್ತರು, ಕೊಪ್ಪಳ ತಹಶೀಲ್ದಾರರು, ಕೊಪ್ಪಳ ಜೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರು, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರು, ಪಂಚಾಯತ್ ರಾಜ್ ಇಂಜೀನಿಯರಿಂಗ್ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು, ಜಿಲ್ಲಾ ಸೂಚನಾ ವಿಜ್ಞಾನಾಧಿಕಾರಿಗಳು, ಬಿಎಸ್‌ಎನ್‌ಎಲ್ ವ್ಯವಸ್ಥಾಪಕರು, ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಮಾಲೋಚಕರಾದ ಅಲ್ತಾಫ್ ಹಾಗೂ ವಿಶ್ವ ಅವರು ಸದಸ್ಯರಾಗಿದ್ದಾರೆ ಮತ್ತು ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರು ಸದಸ್ಯ ಕಾರ್ಯದರ್ಶಿಗಳಾಗಿದ್ದಾರೆ.
ವೇದಿಕೆ ಸಮಿತಿಯು ವೇದಿಕೆ, ಪೆಂಡಾಲ ನಿರ್ಮಾಣ, ವೇದಿಕೆ ಮುಂಭಾಗ ಆಸನ ವ್ಯವಸ್ಥೆ, ವಿದ್ಯುತ್ ದೀಪಗಳ ವ್ಯವಸ್ಥೆ. ಮೈದಾನದಲ್ಲಿ ಬ್ಯಾರಿಕೇಡ ವ್ಯವಸ್ಥೆ, ಕ್ರೀಡಾಂಗಣದಲ್ಲಿ ವಿದ್ಯುತ್ ದೀಪಗಳು ಮತ್ತು ಜನರೇಟರ್ ವ್ಯವಸ್ಥೆ. ಕ್ರೀಡಾಂಗಣದಲ್ಲಿ ಆಸನ, ಕುರ್ಚಿಗಳು, ಟೇಬಲ್‌ಗಳು, ಮೈಕ್‌ಸೆಟ್, ಖಾಟ್ ಮತ್ತು ಹಾಸಿಗೆ ಹಾಗೂ ತ್ಯಾಜ್ಯದ ತೊಟ್ಟಿಗಳ (ದೊಡ್ಡಗಾತ್ರ) ವ್ಯವಸ್ಥೆ. ಇಂಟರ್‌ನೆಟ್ ಹಾಗೂ ಇತರೆ ಟೆಕ್ನಿಕಲ್ ವ್ಯವಸ್ಥೆಗಳನ್ನು ಕಲ್ಪಿಸುವುದು ಹಾಗೂ ಸಿಸಿಟಿವಿ ಅಳವಡಿಕೆಗೆ ವ್ಯವಸ್ಥೆ ಮಾಡಬೇಕು.
*ಭದ್ರತಾ ಸಮಿತಿ:* ಕೊಪ್ಪಳ ಹೆಚ್ಚುವರಿ ಪೊಲೀಸ್ ಅಧೀಕ್ಷಕರ ಅಧ್ಯಕ್ಷತೆಯಲ್ಲಿ ಭದ್ರತಾ ಸಮಿತಿಯನ್ನು ರಚಿಸಲಾಗಿದ್ದು, ಈ ಸಮಿತಿಯಲ್ಲಿ ಜಿಲ್ಲಾ ಅಗ್ನಿಶಾಮಕ ಅಧಿಕಾರಿಗಳು, ಕೊಪ್ಪಳ ಗೃಹ ರಕ್ಷಕ ದಳದ ಕಮಾಂಡೆಂಟ್ ಸದಸ್ಯರಾಗಿದ್ದಾರೆ ಮತ್ತು ಕೊಪ್ಪಳ ಪೊಲೀಸ್ ಉಪ ಅಧೀಕ್ಷಕರು ಸದಸ್ಯ ಕಾರ್ಯದರ್ಶಿಗಳಾಗಿದ್ದಾರೆ.
ಭದ್ರತಾ ಸಮಿತಿಯು ರ‍್ಯಾಲಿಗೆ ಆಗಮಿಸುವ ಎಲ್ಲಾ ಅಭ್ಯರ್ಥಿಗಳಿಗೆ ಹಾಗೂ ಇತರರಿಗೆ ಯಾವುದೇ ರಿತಿಯ ತೊಂದರೆ ಆಗದಂತೆ ಸೂಕ್ತ ರಕ್ಷಣಾ ವ್ಯವಸ್ಥೆ ಕಲ್ಪಿಸುವುದು. ಕ್ರೀಡಾಂಗಣದಲ್ಲಿ ಜನಸಂದಣಿ ನಿರ್ವಹಣೆ ಮಾಡಬೇಕು. ಕ್ರೀಡಾಂಗಣದ ಹೊರಗಡೆ, ಮುಂಭಾಗದಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿ ಸಾರ್ವಜನಿಕ ರಸ್ತೆ ಸಂಚಾರಕ್ಕೆ ತೊಂದರೆಯಾಗದಂತೆ ಕ್ರಮ ವಹಿಸಬೇಕು. ಕ್ರೀಡಾಂಗಣ ಮುಂಭಾಗದಲ್ಲಿ ವಾಹನಗಳ ಸಂಚಾರ ದಟ್ಟಣೆ ಆಗದಂತೆ ಕ್ರಮ ವಹಿಸುವುದು ಮತ್ತು ಎಲ್ಲಾ ರೀತಿಯ ವಾಹನಗಳಿಗೆ ಸೂಕ್ತ ಪಾರ್ಕಿಂಗ್ ವ್ಯವಸೆ ಹಾಗೂ ರ‍್ಯಾಲಿ ನಡೆಯುವ ಸಂದರ್ಭದಲ್ಲಿ ಅಗ್ನಿಶಾಮಕ ವಾಹನ ಮತ್ತು ತುರ್ತು ಸೇವೆಗಳ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು.
*ಮೂಲಭೂತ ಸೌಕರ್ಯ ಸಮಿತಿ:* ಕೊಪ್ಪಳ ನಗರಸಭೆ ಆಯುಕ್ತರ ಅಧ್ಯಕ್ಷತೆಯಲ್ಲಿ ಮೂಲಭೂತ ಸೌಕರ್ಯ ಸಮಿತಿಯನ್ನು ರಚಿಸಲಾಗಿದ್ದು, ಪಂ.ರಾ.ಇಂ ಕಾರ್ಯನಿರ್ವಾಹಕ ಅಭಿಯಂತರರು, ಕೊಪ್ಪಳ ತಾಲ್ಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು ಸದಸ್ಯರಾಗಿದ್ದಾರೆ ಮತ್ತು ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತದ ಕಾರ್ಯನಿರ್ವಾಹಕ ಅಭಿಯಂತರರು ಸದಸ್ಯ ಕಾರ್ಯದರ್ಶಿಗಳಾಗಿದ್ದಾರೆ.
ಮೂಲಭೂತ ಸೌಕರ್ಯ ಸಮಿತಿಯು ಜಿಲ್ಲಾ ಕ್ರೀಡಾಂಗಣದಲ್ಲಿ ಸೇನಾ ನೇಮಕಾತಿ ರ‍್ಯಾಲಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಕುಡಿಯುವ ನೀರಿಗಾಗಿ ನಳಗಳ ವ್ಯವಸ್ಥೆ ಮಾಡುವುದು ಮತ್ತು ನೀರಿನ ವ್ಯವಸ್ಥೆ ಒದಗಿಸಬೇಕು. ಸಿಬ್ಬಂದಿಗಳಿಗೆ ಕುಡಿಯುವ ನೀರಿನ ಬಾಟಲಿಗಳ ವ್ಯವಸ್ಥೆ. ಮೊಬೈಲ್ ಶೌಚಾಲಯಗಳ ವ್ಯವಸ್ಥೆ ಮಾಡುವುದು ಮತ್ತು ಅವುಗಳಿಗೆ ಟ್ಯಾಂಕರ್‌ಗಳ ಮೂಲಕ ನೀರನ್ನು ಒದಗಿಸಲು ಕ್ರಮ ವಹಿಸಬೇಕು. ಪ್ರತಿದಿನ ಕ್ರೀಡಾಂಗಣದಲ್ಲಿ ಸ್ವಚ್ಛಗೊಳಿಸುವುದು ಹಾಗೂ ಸುತ್ತ-ಮುತ್ತ ಪ್ರದೇಶದಲ್ಲಿನ ತ್ಯಾಜ್ಯ ವಸ್ತುಗಳ ವೀಲೆ ಮಾಡುವುದು ಹಾಗೂ ಅಗತ್ಯವಿದ್ದಲ್ಲಿ ಸ್ವಚ್ಛತಾ ಸಿಬ್ಬಂದಿಯನ್ನು ನಿಯೋಜಿಸಬೇಕು. ಸ್ವಚ್ಛತೆಗೆ ಸಂಬಂಧಿಸಿದಂತೆ ಗಮನ ಹರಿಸುವುದು ಹಾಗೂ ಕ್ರಮ ವಹಿಸಬೇಕು.
*ಸಾರಿಗೆ ಸಮಿತಿ:* ಕೊಪ್ಪಳ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಾರಿಗೆ ಸಮಿತಿಯನ್ನು ರಚಿಸಲಾಗಿದ್ದು, ಕೊಪ್ಪಳ ತಹಶೀಲ್ದಾರರು, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಸದಸ್ಯರಾಗಿದ್ದಾರೆ ಮತ್ತು ಕ.ಕ.ರ.ಸಾ.ಸಂಸ್ಥೆ ಕೊಪ್ಪಳ ವಿಭಾಗೀಯ ನಿಯಂತ್ರಣಾಧಿಕಾರಿಗಳು ಸದಸ್ಯ ಕಾರ್ಯದರ್ಶಿಗಳಾಗಿದ್ದಾರೆ.
ಸಾರಿಗೆ ಸಮಿತಿಯು ಸೇನಾ ನೇಮಕಾತಿ ಸಂಬಂಧ ಆಗಮಿಸುವ ಅಭ್ಯರ್ಥಿಗಳಿಗೆ ವಸತಿ ತಂಗು ಸ್ಥಳಗಳಿಂದ (ಹಾಸ್ಟೆಲ್) ಅಥವಾ ಬಸ್ ನಿಲ್ದಾಣಗಳಿಂದ ರ‍್ಯಾಲಿ ನಡೆಯುವ ಜಿಲ್ಲಾ ಕ್ರೀಡಾಂಗಣ ಸ್ಥಳಕ್ಕೆ ಬಸ್‌ಗಳ ವ್ಯವಸ್ಥೆ ಕಲ್ಪಿಸಬೇಕು.
*ಆಹಾರ ಸಮಿತಿ:* ಆಹಾರ ಹಾಗೂ ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕರ ಅಧ್ಯಕ್ಷತೆಯಲ್ಲಿ ಆಹಾರ ಸಮಿತಿಯನ್ನು ರಚಿಸಲಾಗಿದ್ದು, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರು, ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತದ ಕಾರ್ಯನಿರ್ವಾಹಕ ಅಭಿಯಂತರರು, ಸಣ್ಣ ನೀರಾವರಿ & ಅಂತರ್ಜಲ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು, ಸದಸ್ಯರಾಗಿದ್ದಾರೆ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಸದಸ್ಯ ಕಾರ್ಯದರ್ಶಿಗಳಾಗಿದ್ದಾರೆ.
ಆಹಾರ ಸಮಿತಿಯು ಸೇನಾ ನೇಮಕಾತಿ ರ‍್ಯಾಲಿಗೆ ಆಗಮಿಸುವ ಅಭ್ಯರ್ಥಿಗಳಿಗೆ ತಂಗಲು ವಸತಿ ಮತ್ತು ಊಟದ ವ್ಯವಸ್ಥೆ ಕಲ್ಪಿಸುವುದು. ಕ್ರೀಡಾಂಗಣದಲ್ಲಿ ನೇಮಕಾತಿ ಸಿಬ್ಬಂದಿಗಳಿಗೆ ಹಾಗೂ ಅಭ್ಯರ್ಥಿಗಳಿಗೆ ಮತ್ತು ಕಾರ್ಯನಿರ್ವಹಿಸುವ ಇತರರಿಗೂ ಊಟದ ವ್ಯವಸ್ಥೆ ಕಲ್ಪಿಸಬೇಕು.
*ವಸತಿ ಸಮಿತಿ:* ಕೊಪ್ಪಳ ನಗರಸಭೆ ಆಯುಕ್ತರ ಅಧ್ಯಕ್ಷತೆಯಲ್ಲಿ ವಸತಿ ಸಮಿತಿಯನ್ನು ರಚಿಸಲಾಗಿದ್ದು, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರು ಸದಸ್ಯರಾಗಿದ್ದಾರೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಸದಸ್ಯ ಕಾರ್ಯದರ್ಶಿಗಳಾಗಿದ್ದಾರೆ.
ವಸತಿ ಸಮಿತಿಯು ಸೇನಾ ನೇಮಕಾತಿ ರ‍್ಯಾಲಿಗೆ ಆಗಮಿಸುವ ಅಭ್ಯರ್ಥಿಗಳಿಗೆ ತಂಗಲು ವಸತಿ ಮತ್ತು ಊಟದ ವ್ಯವಸ್ಥೆ ಕಲ್ಪಿಸುವುದು. ಕ್ರೀಡಾಂಗಣದಲ್ಲಿ ನೇಮಕಾತಿ ಸಿಬ್ಬಂದಿಗಳಿಗೆ ಹಾಗೂ ಅಭ್ಯರ್ಥಿಗಳಿಗೆ ಮತ್ತು ಕಾರ್ಯನಿರ್ವಹಿಸುವ ಇತರರಿಗೂ ಊಟದ ವ್ಯವಸ್ಥೆ ಕಲ್ಪಿಸಬೇಕು.
ಆರೋಗ್ಯ ನೈರ್ಮಲ್ಯೀಕರಣ ಸಮಿತಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆರೋಗ್ಯ ನೈರ್ಮಲ್ಯೀಕರಣ ಸಮಿತಿಯನ್ನು ರಚಿಸಲಾಗಿದ್ದು, ಕೊಪ್ಪಳ ತಾಲ್ಲೂಕು ವೈದ್ಯಾಧಿಕಾರಿಗಳು ಸದಸ್ಯರಾಗಿದ್ದಾರೆ ಮತ್ತು ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆಯ ಅಂಕಿತ ಅಧಿಕಾರಿಗಳು ಸದಸ್ಯ ಕಾರ್ಯದರ್ಶಿಗಳಾಗಿದ್ದಾರೆ.
ಆರೋಗ್ಯ ನೈರ್ಮಲ್ಯೀಕರಣ ಸಮಿತಿಯು ವೈದ್ಯರು ಮತ್ತು ಶುಶ್ರೂಷ ಸಹಾಯಕಿಯರ ಸಿಬ್ಬಂದಿಗಳನ್ನು ಅಗತ್ಯಕ್ಕನುಗುಣವಾಗಿ ನಿಯೋಜಿಸಬೇಕು. ಅವಶ್ಯಕ ಹಾಗೂ ಜೀವರಕ್ಷಕ ಔಷದಿಗಳ ವ್ಯವಸ್ಥೆ ಒದಗಿಸುವುದು. ದಿನವಿಡಿ ಬೆಳಿಗ್ಗೆ 05 ಗಂಟೆಯಿಂದ ಸಂಜೆಯವರೆಗೆ ಆರೋಗ್ಯ ಸೇವೆ ಒದಗಿಸಬೇಕು. ಎಲ್ಲಾ ಸೌಲಭ್ಯದೊಂದಿಗೆ ಅಂಬುಲೈನ್ಸ್ ವಾಹನ ಸಿದ್ಧವಾಗಿಟ್ಟುಕೊಳ್ಳುವುದು ಮತ್ತು ಆಹಾರ ಗುಣಮಟ್ಟ ಪರಿಶೀಲನೆ ಮಾಡಬೇಕು.
*ಪ್ರಚಾರ ಮತ್ತು ಮಾಧ್ಯಮ ಸಮಿತಿ:* ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಪ್ರಚಾರ ಮತ್ತು ಮಾಧ್ಯಮ ಸಮಿತಿಯನ್ನು ರಚಿಸಲಾಗಿದ್ದು, ಕೊಪ್ಪಳ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸದಸ್ಯರಾಗಿದ್ದಾರೆ ಹಾಗೂ ಜಿಲ್ಲಾ ವಾರ್ತಾಧಿಕಾರಿಗಳು ಸದಸ್ಯ ಕಾರ್ಯದರ್ಶಿಗಳಾಗಿದ್ದಾರೆ.
*ವಿದ್ಯುತ್ ಸರಬರಾಜು ಸಮಿತಿ:* ಜೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರ ಅಧ್ಯಕ್ಷತೆಯಲ್ಲಿ ವಿದ್ಯುತ್ ಸರಬರಾಜು ಸಮಿತಿಯನ್ನು ರಚಿಸಲಾಗಿದ್ದು, ಕೊಪ್ಪಳ ಜೆಸ್ಕಾಂ ಉಪವಿಭಾಗ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಸದಸ್ಯ ಕಾರ್ಯದರ್ಶಿಗಳಾಗಿದ್ದಾರೆ.
ವಿದ್ಯುತ್ ಸರಬರಾಜು ಸಮಿತಿಯು ಕ್ರೀಡಾಂಗಣದಲ್ಲಿ ನಡೆಯುವ ಸೇನಾ ನೇಮಕಾತಿ ರ‍್ಯಾಲಿ ಮುಗಿಯುವವರೆಗೆ ಯಾವುದೇ ರೀತಿ ವಿದ್ಯುತ್ ವ್ಯತ್ಯಯ ಆಗದ ರೀತಿಯಲ್ಲಿ ಸೂಕ್ತ ವ್ಯವಸ್ಥೆ ಮಾಡಬೇಕು.
*ದಾಖಲೆಗಳ ಪರಿಶೀಲನೆ ಸಮಿತಿ:* ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ದಾಖಲೆಗಳ ಪರಿಶೀಲನೆ ಸಮಿತಿಯನ್ನು ರಚಿಸಲಾಗಿದ್ದು, ಕೊಪ್ಪಳ ತಹಶೀಲ್ದಾರರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸದಸ್ಯರಾಗಿದ್ದಾರೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಸದಸ್ಯ ಕಾರ್ಯದರ್ಶಿಗಳಾಗಿದ್ದಾರೆ.
ದಾಖಲೆಗಳ ಪರಿಶೀಲನೆ ಸಮಿತಿಯು ಶಿಕ್ಷಣ ಇಲಾಖೆ, ಕಂದಾಯ (ತಹಶೀಲ್ದಾರ) ಇಲಾಖೆ ಮತ್ತು ಕ್ರೀಡಾ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ವರ್ಗವನ್ನೊಳಗೊಂಡ ತಂಡದೊಂದಿಗೆ ರ‍್ಯಾಲಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳ ಪ್ರತಿಯೊಂದು ದಾಖಲೆಗಳ ಪರಿಶೀಲನೆಗೆ ಕ್ರಮ ವಹಿಸಬೇಕು.
ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಸೇನಾ ನೇಮಕಾತಿ ರ‍್ಯಾಲಿಯ ಹಿನ್ನೆಲೆಯಲ್ಲಿ ರಚಿಸಲಾದ ಸಮಿತಿಗಳ ಎಲ್ಲಾ ಅಧಿಕಾರಿಗಳು, ಸಿಬ್ಬಂದಿವರ್ಗದವರು ತಮಗೆ ವಹಿಸಲಾದ ಕಾರ್ಯಗಳನ್ನು ಜವಾಬ್ದಾರಿಯುತವಾಗಿ ನಿರ್ವಹಿಸಬೇಕು. ಈ ರ‍್ಯಾಲಿಯ ಮೇಲ್ವಿಚಾರಣೆಗಾಗಿ ಕೊಪ್ಪಳ ಉಪವಿಭಾಗಾಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ಮತ್ತು ಕೊಪ್ಪಳ ತಹಶೀಲ್ದಾರರನ್ನು ಲೈಸನಿಂಗ್ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ ಹಾಗೂ ಎಲ್ಲಾ ಸಮಿತಿಗಳ ಅಧ್ಯಕ್ಷರುಗಳು ಉಪವಿಭಾಗಾಧಿಕಾರಿಗಳೊಡನೆ ಸಮನ್ವಯ ಸಾಧಿಸಿ ತಮ್ಮ ಸಮಿತಿಗೆ ವಹಿಸಲಾದ ಕಾರ್ಯಗಳ ಕುರಿತು ಕೂಡಲೇ ಕಾರ್ಯಪ್ರವೃತ್ತರಾಗುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.

Get real time updates directly on you device, subscribe now.

Leave A Reply

Your email address will not be published.

error: Content is protected !!