ಗ್ಯಾರಂಟಿ ಯೋಜನೆಗಳನ್ನು ಸಮರ್ಪಕ ಮತ್ತು ಪ್ರಾಮಾಣಿಕವಾಗಿ ಅನುಷ್ಠಾನಗೊಳಿಸಲು ಶ್ರಮವಹಿಸಿ: ರೆಡ್ಡಿ ಶ್ರೀನಿವಾಸ್

0

Get real time updates directly on you device, subscribe now.

ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ: ಪ್ರಗತಿ ಪರಿಶೀಲನಾ ಸಭೆ
 ಜನ ಸಾಮಾನ್ಯರ ಏಳಿಗೆಗಾಗಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಮಹತ್ತರವಾದ ಐದು ಗ್ಯಾರಂಟಿ ಯೋಜನೆಗಳನ್ನು ಸಾರ್ವಜನಿಕರಿಗೆ ಸಮರ್ಪಕವಾಗಿ ಪ್ರತಿ ತಿಂಗಳು ನಿಟ್ಟಿನಲ್ಲಿ ಇಲಾಖಾ ಅಧಿಕಾರಿಗಳು ಮತ್ತು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯರು ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಅವರು ಹೇಳಿದರು.
ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂಬಂಧ ಕೊಪ್ಪಳ ಜಿಲ್ಲಾ ಪಂಚಾಯತ್ ಜೆ.ಎಚ್ ಪಟೇಲ್ ಸಭಾಂಗಣದಲ್ಲಿ ಅಕ್ಟೋಬರ್ 21ರಂದು ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗ್ಯಾರಂಟಿ ಯೋಜನೆಗಳು ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯಾಗಿರುವ ಸಾಮಾಜಿಕ ಕಾರ್ಯಕ್ರಮವಾಗಿದೆ. ಅರ್ಹರೆಲ್ಲರೂ ಗ್ಯಾರಂಟಿ ಯೋಜನೆಗಳ ವ್ಯಾಪ್ತಿಗೆ ಒಳಪಡಬೇಕು ಎಂಬುದು ಸರ್ಕಾರದ ಉದ್ದೇಶವಾಗಿದ್ದು, ಯಾವುದೇ ಅರ್ಹ ಫಲಾನುಭವಿಗಳು ಈ ಯೋಜನೆಯಿಂದ ಹೊರಗುಳಿಯಬಾರದು. ಈ ಹಿನ್ನೆಲೆಯಲ್ಲಿ ಪ್ರಮಾಣಿಕವಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸುವಂತಹ ಕೆಲಸವನ್ನು ಸಂಬAಧಪಟ್ಟ ಇಲಾಖೆಗಳ ಅಧಿಕಾರಿಗಳು ಮಾಡಬೇಕು. ಶಕ್ತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಗೃಹಜ್ಯೋತಿ ಹಾಗೂ ಯುವನಿಧಿ ಸೇರಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಉಂಟಾಗುತ್ತಿರುವ ಸಣ್ಣ-ಪುಟ್ಟ ತಾಂತ್ರಿಕ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಿ ಎಲ್ಲಾ ಅರ್ಹ ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆಗಳನ್ನು ತಲುಪಿಸಬೇಕು ಎಂದು ತಿಳಿಸಿದರು.
ಯೋಜನೆಗಳಿಗೆ ಸಂಬಂಧಪಟ್ಟ ಇಲಾಖೆಯ ಎಲ್ಲಾ ಕಚೇರಿಗಳ ಆವರಣದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿಯನ್ನು ಬ್ಯಾನರ್ ಗಳಲ್ಲಿ ಹಾಕುವುದರ ಮೂಲಕ ಯೋಜನೆಗಳ ಬಗ್ಗೆ ಹೆಚ್ಚಾಗಿ ಪ್ರಚಾರ ಮಾಡಬೇಕು. ಅನ್ನಭಾಗ್ಯ ಯೋಜನೆಗೆ ಸಂಬಂದಧಿಸಿದಂತೆ ನ್ಯಾಯ ಬೆಲೆ ಅಂಗಡಿಗಳಲ್ಲಿ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಬೇಕು ಹಾಗೇ ತಿಂಗಳಲ್ಲಿ ರಜೆ ದಿನಗಳನ್ನು ಹೊರತುಪಡಿಸಿ ಎಲ್ಲಾ ದಿನ ಸಾರ್ವಜನಿಕರಿಗೆ ಪಡಿತರವನ್ನು ವಿತರಿಸಬೇಕು. ಗ್ಯಾರಂಟಿ ಯೋಜನೆಗಳ ಸದಸ್ಯರು ಪ್ರತಿ ತಿಂಗಳು ತಾಲ್ಲೂಕುವಾರು ನ್ಯಾಯ ಬೆಲೆ ಅಂಗಡಿಗಳ ಮಾಲೀಕರೊಂದಿಗೆ ಸಭೆ ನೆಡಸಬೇಕು. ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಅಧಿಕಾರಿಗಳಿಗೆ ಅರ್ಹ ಫಲಾನುಭವಿಗಳು ಸಹಕರಿಸಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೇಯ ಅವರು ಮಾತನಾಡಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ,  ಶಕ್ತಿ ಹಾಗೂ ಅನ್ನಭಾಗ್ಯ ಯೋಜನೆಗಳಲ್ಲಿ  ತಿರಸ್ಕೃತವಾದ ಅರ್ಜಿಗಳನ್ನು ತಾಲ್ಲೂಕುವಾರು ಜೊತೆಗೆ ಫಲಾನುಭವಿಗಳ ಹೆಸರು ಸಹಿತ ಮಾಹಿತಿಯನ್ನು ಗ್ಯಾರಂಟಿ ಯೋಜನೆಗಳ ಸದಸ್ಯರಿಗೆ ಕೊಡಬೇಕು. ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ  ಶೇ.100 ರಷ್ಟು ಪ್ರಗತಿ ವರದಿಯನ್ನು ಸಾಧಿಸಬೇಕು ಎಂದು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಗ್ಯಾರಂಟಿ ಯೋಜನೆಗಳಿಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ತಮ್ಮ ಸಿಬ್ಬಂದಿಗಳ ಜೊತೆ ಸಭೆ ನೆಡೆಸಿ ಯೋಜನೆಗಳ ಬಗ್ಗೆ ಅರಿವು ಮೂಡಿಸುವುದರ ಜೊತೆಗೆ ಕಟ್ಟುನಿಟ್ಟಾಗಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ತಿಳಿಸಿದರು.
*ಗೃಹಲಕ್ಷ್ಮಿ:* ಯೋಜನೆಯಡಿ ಕೊಪ್ಪಳ ಜಿಲ್ಲೆಯಲ್ಲಿ ಒಟ್ಟು 3,20,440 ಪಡಿತರ ಚೀಟಿಗಳನ್ನು ಹೊಂದಿರುವ ಫಲಾನುಭವಿಗಳಿದ್ದು 3,21,487 ಮನೆ ಯಜಮಾನಿಯರು ಗೃಹಲಕ್ಷ್ಮಿ ಯೋಜನೆಗೆ ನೊಂದಣಿಯಾಗಿದ್ದು, ಆಗಸ್ಟ್–2023 ರಿಂದ ಜುಲೈ-2024 ರವರೆಗೆ ಡಿ.ಬಿ.ಟಿ. ಮೂಲಕ ಒಟ್ಟು ರೂ. 661,88,98,000 ರೂ ಗಳನ್ನು ಪಾವತಿಸಲಾಗಿರುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಸಭೆಗೆ ಮಾಹಿತಿ ನೀಡಿದರು.
*ಗೃಹ ಜ್ಯೋತಿ:* ಕೊಪ್ಪಳ ಜಿಲ್ಲೆಯಲ್ಲಿ ಒಟ್ಟು 2,73,920 ಫಲಾನುಭವಿಗಳು ಗೃಹ ಜ್ಯೋತಿ ಯೋಜನೆಯಡಿಯಲ್ಲಿ ನೋಂದಣಿಯಾಗಿರುತ್ತಾರೆ. ಸೆಪ್ಟೆಂಬರ್-2024ರ ಅಂತ್ಯಕ್ಕೆ ಸಬ್ಸಿಡಿ ಮೂಲಕ ಒಟ್ಟು ರೂ. 136.80 ಕೋಟಿ ಗಳನ್ನು ಈ ಯೋಜನೆಗೆ ಪಾವತಿಸಲಾಗಿರುತ್ತದೆ ಎಂದು ಜೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು ಮಾಹಿತಿ ನೀಡಿದರು.
*ಯುವನಿಧಿ:* ಯುವನಿಧಿ ಯೋಜನೆಯಡಿ  ಡಿಸೆಂಬರ್-2023 ರಿಂದ ಆಗಷ್ಟ್-2024 ರವರೆಗೆ ಒಟ್ಟು 11268 ಫಲಾನುಭವಿಗಳಿಗೆ ಡಿ.ಬಿ.ಟಿ. ಮೂಲಕ ಹಣ ಪಾವತಿಸಲಾಗಿರುತ್ತದೆ. ಇದರಲ್ಲಿ 11125 ಪದವಿಧರರಿಗೆ ತಿಂಗಳಿಗೆ ರೂ. 3,000 ರಂತೆ ಹಾಗೂ 143 ಡಿಪ್ಲೋಮ ವಿದ್ಯಾರ್ಥಿಗಳಿಗೆ ತಿಂಗಳಿಗೆ ರೂ. 1,500 ರಂತೆ ಒಟ್ಟು 11268 ವಿದ್ಯಾರ್ಥಿಗಳಿಗೆ ಒಟ್ಟು ಮೊತ್ತ ರೂ. 3.35 ಕೋಟಿಗಳನ್ನು ಪಾವತಿಸಲಾಗಿರುತ್ತದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಅಧಿಕಾರಿಗಳು ಮಾಹಿತಿ ನೀಡಿದರು.
*ಅನ್ನಭಾಗ್ಯ:* ಅನ್ನಭಾಗ್ಯ ಯೋಜನೆಯಡಿ ಕೊಪ್ಪಳ ಜಿಲ್ಲೆಯಲ್ಲಿ ಒಟ್ಟು 3,21,994 ಪಡಿತರ ಚೀಟಿಗಳ ಫಲಾನುಭವಿಗಳು ಅರ್ಹರಿದ್ದು, ಇದರಲ್ಲಿ 2,95,703 ಫಲಾನುಭವಿಗಳಿಗೆ ಜುಲೈ-2023 ರಿಂದ ಜುಲೈ-2024 ರವರೆಗೆ ಒಟ್ಟು ರೂ. 224.81 ಕೋಟಿ ಗಳ ವೆಚ್ಚ ಭರಿಸಲಾಗಿರುತ್ತದೆ ಎಂದು ಆಹಾರ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದರು.
*ಶಕ್ತಿ ಯೋಜನೆ:* ಶಕ್ತಿ ಯೋಜನೆಯಡಿ ಕೊಪ್ಪಳ ಜಿಲ್ಲೆಯಲ್ಲಿ ಒಟ್ಟು 185.29 ಲಕ್ಷ ಮಹಿಳಾ ಪ್ರಯಾಣಿಕರು ಶಕ್ತಿ ಯೋಜನೆಯಡಿ ಸೆಪ್ಟೆಂಬರ್-2024 ರವರೆಗೆ ಉಚಿತವಾಗಿ ಪ್ರಯಾಣಿಸಿದ್ದಾರೆ ಎಂದು ಕಲ್ಯಾಣ ಕರ್ನಾಟಕದ ರಸ್ತೆ ಸಾರಿಗೆ ನಿಗಮದ ಕೊಪ್ಪಳ ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿದರು.
ಈ ಸಂಧರ್ಭದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಎಸ್.ಟಿ ಖಾದ್ರಿ, ಅಮರೇಶ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಸೇರಿದಂತೆ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Get real time updates directly on you device, subscribe now.

Leave A Reply

Your email address will not be published.

error: Content is protected !!